ಬೆಂಗಳೂರು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಶರದ್ ಬಾಹು ಸಾಹೇಬ್ ಕಲಾಸ್ಕರ್ಗೆ ಜಾಮೀನು ದೊರೆತಿದ್ದು, ಈ ಮೂಲಕ ಹತ್ಯೆ ಪ್ರಕರಣದ ಬಂಧನಕ್ಕೊಳಗಾಗಿದ್ದ ಆರೋಪಿಗಳೆಲ್ಲರಿಗೂ ಜಾಮೀನು ದೊರೆತಂತೆ ಆಗಿದೆ.
ಆರೋಪಿ ಶರದ್ ಬಾಹು ಸಾಹೇಬ್ ಕಲಾಸ್ಕರ್ಗೆ ೨ ಲಕ್ಷ ರೂ.ಗಳ ಬಾಂಡ್ ಮತ್ತು ಎರಡು ಶ್ಯೂರಿಟಿಗಳನ್ನು ನೀಡಬೇಕು ಎಂದು ತಿಳಿಸಿ ಷರತ್ತು ಬದ್ಧ ಜಾಮೀನನ್ನು ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಶುಕ್ರವಾರ ಜಾಮೀನು ನೀಡಿತು.
ಈ ವೇಳೆ ನ್ಯಾಯಾಧೀಶ ಮುರುಳೀಧರ್ ಪೈ ಅರ್ಜಿದಾರರು ೨೦೧೮ರ ಸೆಪ್ಟೆಂಬರ್ ೪ರಿಂದ ಬಂಧನದಲ್ಲಿದ್ದು, ಜಾಮೀನು ಮಂಜೂರು ಮಾಡಬಹುದಾಗಿದೆ ಎಂದು ಹೇಳಿದರು.
ಸಂವಿಧಾನದ ೨೧ರ ಅಡಿ ಬದುಕುವುದು ಮೂಲಭೂತ ಹಕ್ಕು ಎಂಬುದಾಗಿ ಹಲವು ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ತಿಳಿಸಿದೆ. ಆರೋಪಿಗಳ ವಿರುದ್ಧ ವಿಚಾರಣೆ ಬಾಕಿಯಿರುವ ಸಂದರ್ಭದಲ್ಲಿ ಅವರ ವೈಯಕ್ತಿಕ ಹಕ್ಕು ಕಸಿದುಕೊಳ್ಳಲಾಗುವುದಿಲ್ಲ. ಅನಗತ್ಯ ವಿಳಂಬವು ಬದುಕುವ ಹಕ್ಕನ್ನು ಮೊಟಕುಗೊಳಿಸಿದಂತಾಗಲಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ, ಎಂದು ತಿಳಿಸಿದರು.
ಇದಕ್ಕೆ ಪ್ರಕರಣದ ಸಾಕ್ಷಿಗಳ ಹೆಸರುಗಳನ್ನು ಆರೋಪಿಗಳಿಗೆ ತಿಳಿಯದಂತೆ ಮರೆ ಮಾಚಲಾಗಿದೆ. ಅಂತಹ ಸಾಕ್ಷಿಗಳನ್ನು ನಾಶ ಮಾಡುವ ಆತಂಕ ಇರುವುದಿಲ್ಲ. ಈಗಾಗಲೇ ೧೬೪ ಸಾಕ್ಷಿಗಳನ್ನು ಪರಿಶೀಲಿಸಿದ್ದು, ಉಳಿದ ಸಾಕ್ಷಿಗಳಲ್ಲಿ ಹೆಚ್ಚಿನದಾಗಿ ಪೊಲೀಸರು, ಇತರ ಇಲಾಖೆಗಳ ಅಧಿಕಾರಿಗಳಿದ್ದಾರೆ. ಹೀಗಾಗಿ ಪ್ರಾಸಿಕ್ಯೂಷನ್ ಆತಂಕ ಪರಿಗಣಿಸಲಾಗದು ಎಂದು ಆದೇಶದಲ್ಲಿ ನ್ಯಾಯಾಲಯ ತಿಳಿಸಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳು ಎನ್ನಲಾದ ಅಮೂಲ್ ಕಾಳೆ, ರಾಜೇಶ್ ಡಿ. ಬಂಗೇರಾ, ವಾಸುದೇವ್ ಸೂರ್ಯವಂಶಿ, ರುಷಿಕೇಶ್ ದೇವ್ಡೇಕರ್, ಪರಶುರಾಮ್ ವಾಗ್ಮೋರೆ, ಗಣೇಶ್ ಮಿಸ್ಕಿನ್, ಅಮಿತ್ ರಾಮಚಂದ್ರ ಬುಡ್ಡಿ ಮತ್ತು ಮನೋಹರ್ ದುಂಡೀಪ ಯಡವೆ ಅವರಿಗೆ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಕಳೆದ ವರ್ಷ ಜಾಮೀನು ಮಂಜೂರು ಮಾಡಿತ್ತು. ಇನ್ನೂ ಈ ಪ್ರಕರಣದಲ್ಲಿ ಒಟ್ಟು ೧೮ ಮಂದಿ ಆರೋಪಿಗಳಿದ್ದು, ೧೫ನೇ ಆರೋಪಿ ವಿಕಾಸ್ ಪಟೇಲ್ ಅಲಿಯಾಸ್ ದಾದಾ ಅಲಿಯಾಸ್ ನಿಹಾಲ್ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಪ್ರಾಸಿಕ್ಯೂಷನ್ ಪರ ವಕೀಲರು ವಾದ ಮಂಡಿಸಿ, ವಿಚಾರಣೆ ವೇಳೆ ಅರ್ಜಿದಾರ ಆರೋಪಿಗೆ ಜಾಮೀನು ಮಂಜೂರು ಸಿಕ್ಕಿದರೆ ಇದೇ ಮಾದರಿ ರೀತಿಯ ಕೃತ್ಯಗಳಲ್ಲಿ ಭಾಗಿಯಾಗುವ ಆತಂಕ ಇದೆ ಎಂದು ಹೇಳಿದರು.
ಕಳೆದ ವರ್ಷ ಗೌರಿ ಲಂಕೇಶ್ ಹತ್ಯೆಯ ಮಿಕ್ಕ ಆರೋಪಿಗಳಿಗೆ ವಿಜಯಪುರದಲ್ಲಿ ಸನ್ಮಾನ ನಡೆದ ಮೇಲೆ ರಾಜ್ಯವ್ಯಾಪಿ ಪ್ರತಿಭಟನೆಗಳು ನಡೆಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ಗೌರಿ ಹತ್ಯೆ ಮತ್ತು ಕಲ್ಬುರ್ಗಿಯವರ ಹತ್ಯೆ ಆರೋಪಿಗಳಿಗೆ ಜಾಮೀನು ನೀಡಿ ಅಥವಾ ಶಿಕ್ಷೆಯಿಂದ ಮುಕ್ತಿಗೊಳಿಸಿ ಮತ್ತೊಂದು ಅನಾಹುತವನ್ನ ಸೃಷ್ಟಿಸುವ ಹುನ್ನಾರ ಇರಬಹುದೇ? ಲಿಂಗಾಯತರು ಬಹಳ ಎಚ್ಚೆತ್ತುಕೊಳ್ಳಬೇಕಿದೆ