ಬಾಗಲಕೋಟೆ
ಬಸವ ಜಯಂತಿ ಅಂಗವಾಗಿ ಕೂಡಲಸಂಗಮದಲ್ಲಿ ಏ.29 ಮತ್ತು 30 ರಂದು ಅನುಭವ ಮಂಟಪ-ಬಸವಾದಿ ಶರಣರ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಅನುಭವ ಮಂಟಪ-ಬಸವಾದಿ ಶರಣರ ವೈಭವ ಕಾರ್ಯಕ್ರಮದ ಸಿದ್ಧತೆ ಹಾಗೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಸವಣ್ಣನವರ ಬದುಕು, ಸಂದೇಶ ಹಾಗೂ ಚಿಂತನೆಗಳನ್ನು ವ್ಯಾಪಕವಾಗಿ ಪಸರಿಸುವ ನಿಟ್ಟಿನಲ್ಲಿ ವಿಶಿಷ್ಟವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಏ.29 ರಂದು ಬೆಳಿಗ್ಗೆ ಎರಡು ಹಾಗೂ ಮಧ್ಯಾಹ್ನ ಎರಡು ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಜೊತೆಗೆ ಸ್ಥಳೀಯ ಕಲಾವಿದರಿಂದ ಸಂಗೀತ ಹಾಗೂ ನೃತ್ಯರೂಪಕ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿದೆ. ‘ಶಿವರಾತ್ರಿ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು.
ಏ.30 ರಂದು ಬೆಳಿಗ್ಗೆ ಸ್ಥಳೀಯ ಹಾಗೂ ವಿವಿಧ ಜಿಲ್ಲೆಗಳ ಕಲಾತಂಡ ಹಾಗೂ ಸ್ತಬ್ದಚಿತ್ರಗಳ ಅದ್ದೂರಿ ಮೆರವಣಿಗೆ ನಡೆಯಲಿದೆ. ನಂತರ ವೇದಿಕೆ ಕಾರ್ಯಕ್ರಮ, ಸಂಗೀತ, ನಾಟಕ ಹಾಗೂ ವೈವಿಧ್ಯಮಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಎರಡನೇ ದಿನದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ ಎಂದರು.
ಪ್ರತಿ ತಾಲ್ಲೂಕಿನ ಸಾರ್ವಜನಿಕರು ಬರಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಶಾಸಕ ಜೆ.ಟಿ. ಪಾಟೀಲ, ವಿಧಾನ ಪರಿಷತ್ ಶಾಸಕ ಪಿ.ಎಚ್.ಪೂಜಾರ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಕೂಡಲಸಂಗಮ ಅಭಿವೃದ್ದಿ ಪ್ರಾಧಿಕಾರದ ಆಯುಕ್ತ ಮಹಾದೇವ ಮುರಗಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ ಉಪಸ್ಥಿತರಿದ್ದರು