ನಾಡೋಜರ ಅಮೃತ ಮಹೋತ್ಸವದ ಸಂಭ್ರಮ
ಭಾಲ್ಕಿ
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ್ ಪಟ್ಟಣದಲ್ಲಿ ನಡೆದ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರಂಭವನ್ನು ಸೋಮವಾರ ಉದ್ಘಾಟಿಸಿದರು.
ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಇಡೀ ಬದುಕು ಬಸವತತ್ವ ಪ್ರಚಾರ ಪ್ರಸಾರಕ್ಕೆ ಮುಡಿಪಾಗಿಟ್ಟಿದ್ದಾರೆ, ಅಂತಹ ಮಠದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ವಿಶ್ವಗುರು ಬಸವಣ್ಣನವರು ಬೋಧಿಸಿದ ಕಾಯಕ-ದಾಸೋಹ ತತ್ವವನ್ನು ನಾಡಿನಾದ್ಯಂತ ಬೆಳಗಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.

ಬಡತನದ ಪರಿವಾರದಿಂದ ವಿದ್ಯಾಭ್ಯಾಸಕ್ಕಾಗಿ ಮಠ ಪ್ರವೇಶಿಸಿದ ಇವರು ಪೀಠಾಧಿಪತಿಯಾಗಿ ಹಿರೇಮಠ ಸಂಸ್ಥಾನವನ್ನು ರಾಜ್ಯದಲ್ಲಿಯೇ ಮಾದರಿ ಮಠವಾಗಿ ಬೆಳೆಸಿದ್ದು ಮಾದರಿ ಎನಿಸಿದೆ. ಬಡವರು, ನಿರಾಶ್ರಿತರು, ದುರ್ಬಲ ವರ್ಗದವರಿಗೆ ಅನ್ನ, ಅಕ್ಷರ, ಆಶ್ರಯ ಕಲ್ಪಿಸಿ ಸಮಾಜದಲ್ಲಿ ಬದಲಾವಣೆ ತರುವ ಕೆಲಸ ಮಾಡಿದ್ದಾರೆ ಎಂದರು.
ಸಾನ್ನಿಧ್ಯ ವಹಿಸಿದ ಸುತ್ತೂರು ವೀರಸಿಂಹಾಸನ ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಮಾತನಾಡಿ 20ನೆಯ ಶತಮಾನದಲ್ಲಿ ಅನುಭವ ಮಂಟಪ ಪುನರ್ಸ್ಥಾಪಿಸಿ ಬಸವಣ್ಣನವರ ವಿಚಾರಧಾರೆ ಜಗದಗಲ ತಲುಪಿಸುವ ಕಾರ್ಯ ಮಾಡಿದ್ದಾರೆ. ರಾಜ್ಯ ಅಲ್ಲದೇ ನೆರೆಯ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ವಿಶ್ವಗುರು ಬಸವಣ್ಣನವರ ಸಂದೇಶ ತಲುಪಿಸಿ ಆ ಭಾಗದ ಭಕ್ತರನ್ನು ಉದ್ಧರಿಸುತ್ತಿದ್ದಾರೆ ಎಂದರು.

ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ಕಲ್ಪಿಸಿ ನಾಡಿನ ಅಮೂಲ್ಯ ಆಸ್ತಿಯನ್ನಾಗಿ ಮಾಡುತ್ತಿರುವುದು ಮಾದರಿ ತರಿಸಿದೆ. ಅವರ ಸೇವೆ ಮುಂದುವರೆಯಲಿ ವಿಶ್ವಗುರು ಬಸವಣ್ಣನವರ ಆಶೀರ್ವಾದ ಪೂಜ್ಯರ ಮೇಲೆ ಸದಾ ಇರಲಿ ಎಂದು ಹಾರೈಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ ಡಾ.ಚನ್ನಬಸವ ಪಟ್ಟದ್ದೇವರ ಮಾರ್ಗದಲ್ಲಿ ಹೆಜ್ಜೆಯಿಟ್ಟಿರುವ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ದೇಶ ವಿದೇಶಗಳಲ್ಲಿ ಬಸವತತ್ವ ಪ್ರಚಾರದ ಮೂಲಕ ಸಮೃದ್ದ ಸಮಾಜ ಕಟ್ಟುವ ಕೆಲಸ ಮಾಡುತ್ತಿದ್ದಾರೆ.

ಅವರು ನಮ್ಮ ಭಾಗದ ವಿದ್ಯಾರ್ಥಿಗಳಿಗೆ ಸ್ಥಾಪಿಸಿದ ಶಿಕ್ಷಣ ಸಂಸ್ಥೆಯಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಉತ್ತಮ ಸಂಸ್ಕಾರ ಪಡೆಯಲು ರಾಜ್ಯ ಮತ್ತು ಹೊರ ರಾಜ್ಯಗಳ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಇಲ್ಲಿಗೆ ಆಗಮಿಸುತ್ತಿರುವುದು ಹೆಮ್ಮೆಯ ಸಂಗತಿ.
ಅಂತಹ ಪೂಜ್ಯರು ಅಮೃತ ಮಹೋತ್ಸವದ ಸಂಭ್ರಮದಲ್ಲಿರುವುದು ಹೆಮ್ಮೆ ತರಿಸಿದೆ. ವರ್ಷ ಪೂರ್ತಿ ಯೋಜನೆ ರೂಪಿಸಿ ಪೂಜ್ಯರ ಅಮೃತಮಹೋತ್ಸವ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಿಳಿಸಿದರು.
ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ ಬಸವಣ್ಣನವರ ಚಿಂತನೆಗಳು ವಿಶ್ವಕ್ಕೆ ತಲುಪಬೇಕಿದೆ ಈ ಹಿನ್ನೆಲೆಯಲ್ಲಿ ಬುದ್ಧ, ಮಹಾವೀರ, ಗುರು ನಾನಕ ಜಯಂತಿಗಳಿಗೆ ರಜೆ ನೀಡುವಂತೆ ಬಸವಣ್ಣನವರ ಜಯಂತಿಗೂ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡುವ ಕೆಲಸ ಮಾಡಿದ್ದರೆ ಬಸವಣ್ಣನವರ ವಿಚಾರಧಾರೆಗಳು ಮತ್ತಷ್ಟು ವೇಗವಾಗಿ ಜಾಗತಿಕ ಮಟ್ಟಕ್ಕೆ ತಲುಪಲಿವೆ ಎಂದು ತಿಳಿಸಿದರು.

ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಪ್ರಾಸ್ತಾವಿಕ ಮಾತನಾಡಿದರು. ಸಂಸದ ಸಾಗರ ಖಂಡ್ರೆ, ಮಾಜಿ ಶಾಸಕ ಪ್ರಕಾಶ ಖಂಡ್ರೆ ಮಾತನಾಡಿದರು. ಸಿದ್ದಯ್ಯ ಸ್ವಾಮೀಜಿ, ಹುಮನಬಾದ್ ಶಾಸಕ ಡಾ.ಸಿದ್ದು ಪಾಟೀಲ್ ಬಾಬುವಾಲಿ, ಬಸವರಾಜ ಬುಳ್ಳಾ, ಚನ್ನಬಸವ ಬಳತೆ, ಬಸವರಾಜ ಧನ್ನೂರು ಇದ್ದರು.