ಗದಗ
ಪೂಜ್ಯ ಸಿದ್ಧಲಿಂಗ ಶ್ರೀಗಳ ನೆನಪಿನಲ್ಲಿ ನೀಡುವ ‘ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’ಯನ್ನು ಈ ಬಾರಿ ಮರಣೋತ್ತರವಾಗಿ ಸಂಶೋಧಕ ಪ್ರೊ. ಎಂ.ಎಂ.ಕಲಬುರ್ಗಿ ಅವರಿಗೆ ಅಕ್ಟೊಬರ್ 3ರಂದು ನೀಡಲಾಗುವುದು.
ಸತ್ಯಶೋಧಕ ಸಂಶೋಧಕ ಕಲಬುರ್ಗಿ 10 ವರ್ಷಗಳ ಹಿಂದೆ ಹಂತಕರ ಗುಂಡಿಗೆ ಬಲಿಯಾಗಿದ್ದರು.
ಅದೇ ದಿನ ಶ್ರೀ ಮಠದಲ್ಲಿ ಸಿದ್ಧಲಿಂಗ ಶ್ರೀಗಳ 7ನೇ ಪುಣ್ಯಸ್ಮರಣೆ, ಮರಣವೇ ಮಹಾನವಮಿ ಆಚರಣೆ ಹಾಗೂ ಹಾಗೂ ಗ್ರಂಥಗಳ ಬಿಡುಗಡೆ ಸಮಾರಂಭ ನೆರವೇರಲಿದೆ ಎಂದು ಪ್ರಶಸ್ತಿ ಸಮಿತಿಯ ಕಾರ್ಯದರ್ಶಿಗಳಾದ ಎಸ್.ಎಸ್. ಪಟ್ಟಣಶೆಟ್ಟರ ನುಡಿದರು.
ಸೋಮವಾರ ಪತ್ರಿಕಾಭವನದಲ್ಲಿ ಜರುಗಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ತೋಂಟದಾರ್ಯ ಶಿಕ್ಷಣ ಸಂಸ್ಥೆಗಳ ಎಲ್ಲಾ ನೌಕರರು ಹಾಗೂ ಅಭಿಮಾನಿ ಶಿಷ್ಯರು ಸ್ಥಾಪಿಸಿದ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಯನ್ನು ಶ್ರೀಗಳ ಹಾದಿಯಲ್ಲಿ ಸಾಗಿಬಂದ ನಾಡಿನ ಗಣ್ಯರಿಗೆ 2018ರಿಂದ ಪ್ರದಾನ ಮಾಡಲಾಗುತ್ತಿದೆ.

ಅದರಂತೆ 2025ನೇ ಸಾಲಿನ ಪ್ರಶಸ್ತಿಯನ್ನು ಈ ದೇಶದ ಪ್ರಸಿದ್ಧ ಸಂಶೋಧಕರು, ಈ ದೇಶದಲ್ಲೇ ಅತಿಹೆಚ್ಚು ಶಿಲಾಶಾಸನಗಳನ್ನು ಅಧ್ಯಯನ ಮಾಡಿದ ಹಂಪಿ ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದ ನಾಡೋಜ ಹುತಾತ್ಮ ಡಾ. ಎಂ.ಎಂ. ಕಲಬುರ್ಗಿ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವದು, ಎಂದು ಹೇಳಿದರು.
ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ಮೊತ್ತ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಈ ಪ್ರಶಸ್ತಿಯನ್ನು ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಡಾ. ಎಂ. ಎಂ. ಕಲಬುರ್ಗಿಯವರ ಧರ್ಮಪತ್ನಿಯವರಾದ ಉಮಾದೇವಿ ಎಂ. ಕಲಬುರ್ಗಿ ಅವರು ಸ್ವೀಕರಿಸುವರು.
ಕಾರ್ಯಕ್ರಮದ ಸಮ್ಮುಖವನ್ನು ಪೂಜ್ಯ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮಿಗಳು, ತೋಂಟದಾರ್ಯಮಠ ಮುಂಡರಗಿ, ಪೂಜ್ಯ ಶಾಂತಲಿಂಗ ಮಹಾಸ್ವಾಮಿಗಳು ತೋಂಟದಾರ್ಯಮಠ ಶಿರೋಳ, ಪೂಜ್ಯ ಶ್ರೀ ಶಾಂತಲಿಂಗ ಮಹಾಸ್ವಾಮಿಗಳು ಅರಸಿಕೇರಿ, ಪ್ರಭು ಮಹಾಸ್ವಾಮಿಗಳು ಸಂಡೂರ, ಪೂಜ್ಯ ಕೋರಣೇಶ್ವರ ಮಹಾಸ್ವಾಮಿಗಳು ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಅನುಭವ ಮಂಟಪ ಆಳಂದ ಇವರು ವಹಿಸುವರು.
ಕಾರ್ಯಕ್ರಮದಲ್ಲಿ ಧಾರವಾಡದ ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ವೀರಣ್ಣ ರಾಜೂರ ಕೃತಜ್ಞತಾ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಕಾನೂನು, ಸಂಸದೀಯ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್. ಕೆ. ಪಾಟೀಲ, ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಲೋಕಸಭಾ ಸದಸ್ಯರಾದ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರು ಹಾಗೂ ನರಗುಂದ ಹಾಲಿ ಶಾಸಕರಾದ ಸಿ. ಸಿ. ಪಾಟೀಲ, ರೋಣ ಶಾಸಕರಾದ ಜಿ. ಎಸ್. ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಎಸ್.ವ್ಹಿ. ಸಂಕನೂರ, ಶಿರಹಟ್ಟಿ ಶಾಸಕರಾದ ಡಾ. ಚಂದ್ರು ಲಮಾಣಿ, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಮಲ್ಲಿಕಾ ಘಂಟಿ, ಮಾಜಿ ಸಚಿವರಾದ ಎಸ್.ಎಸ್. ಪಾಟೀಲ, ಮಾಜಿ ಶಾಸಕರಾದ ಡಿ. ಆರ್. ಪಾಟೀಲ, ರಾಮಕೃಷ್ಣ ದೊಡ್ಡಮನಿ ಮಂತಾದವರು ಭಾಗವಹಿಸುವರು.
ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಕನ್ನಡಕ್ಕೆ ಅನುವಾದಿಸಿದ “ತೌಲನಿಕ ಧರ್ಮದರ್ಶನ” ಗ್ರಂಥ ಇದೇ ಸಂದರ್ಭದಲ್ಲಿ ಬಿಡುಗಡೆಯಾಗುವದು ಎಂದು ಸಮಿತಿಯ ಕಾರ್ಯದರ್ಶಿಗಳಾದ ಎಸ್.ಎಸ್. ಪಟ್ಟಣಶೆಟ್ಟರ ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಜಗದ್ಗುರು ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ಡಾ. ಧನೇಶ ದೇಸಾಯಿ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷರಾದ ಬಾಲಚಂದ್ರ ಭರಮಗೌಡರ, ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷರಾದ ಕೆ. ಎಸ್. ಚಟ್ಟಿ, ಕಾರ್ಯದರ್ಶಿ ಶೇಖಣ್ಣ ಕವಳಿಕಾಯಿ, ಶ್ರೀಮಠದ ವ್ಯವಸ್ಥಾಪಕರಾದ ಎಂ.ಎಸ್. ಅಂಗಡಿ, ಚನ್ನಯ್ಯ ಹಿರೇಮಠ, ಕೊಟ್ರೇಶ ಮೆಣಸಿನಕಾಯಿ ಮತ್ತೀತರರು ಉಪಸ್ಥಿತರಿದ್ದರು.