ಬೀದರ್
ಅಖಿಲ ಭಾರತ ವೀರಶೈವ ಮಹಾಸಭೆ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ (102) ಅವರ ಆರೋಗ್ಯ ತೀವ್ರವಾಗಿ ಕ್ಷೀಣಿಸಿದ ಕಾರಣ ಅವರನ್ನು ನಗರದ ಖಾಸಗಿ ಆಸ್ಪತ್ರೆಯಿಂದ ಮನೆಗೆ ಸ್ಥಳಾಂತರಿಸಲಾಗಿದೆ.
ಸೋಮವಾರ ಬೆಳಿಗ್ಗೆ ಖಂಡ್ರೆ ಕುಟುಂಬದವರ ಸಮ್ಮುಖದಲ್ಲಿ ಭೀಮಣ್ಣ ಖಂಡ್ರೆ ಅವರನ್ನು ಆಸ್ಪತ್ರೆಯಿಂದ ಮನೆಗೆ ಕೊಂಡೊಯ್ಯಲಾಯಿತು.
‘ಭೀಮಣ್ಣ ಖಂಡ್ರೆಯವರ ಆರೋಗ್ಯ ಬಹಳ ಕ್ಷೀಣಿಸಿದೆ. ಜೀವರಕ್ಷಕಗಳನ್ನು ಅಳವಡಿಸಿ ಆಂಬ್ಯುಲೆನ್ಸ್ ನಲ್ಲಿ ಅವರ ಕುಟುಂಬದವರ ಇಚ್ಛೆಯಂತೆ ಮನೆಗೆ ಕಳುಹಿಸಿಕೊಡಲಾಗಿದೆ’ ಎಂದು ಗುದಗೆ ಮಲ್ಟಿ ಸ್ಪೆಷಾಲಿಟಿ ಆ್ಯಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಚಂದ್ರಕಾಂತ ಗುದಗೆ ಹೇಳಿದ್ದಾರೆ.
ವಯೋಸಹಜ ಕಾಯಿಲೆಯಿಂದ ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿರುವ ಅವರ ಆರೋಗ್ಯದಲ್ಲಿ ಶನಿವಾರ ಚೇತರಿಕೆ ಕಂಡಿತ್ತು.
ಆದರೆ, ಭಾನುವಾರ ಸತತವಾಗಿ ಆರೋಗ್ಯ ಕ್ಷೀಣಿಸುತ್ತ ಹೋಯಿತು. ಅವರ ಮಗ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಭಾನುವಾರ ತಡರಾತ್ರಿ ವರೆಗೆ ಆಸ್ಪತ್ರೆಯಲ್ಲಿಯೇ ಇದ್ದರು.
