ಯಾದಗಿರಿ
ಮಹಾತ್ಮಾ ಗಾಂಧೀಜಿ, ನೆಹರು ಬಗ್ಗೆ ದ್ವೇಷ ಭಾಷಣ ಆರೋಪ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಫೆ.21ರಂದು ಯಾದಗಿರಿ ಜಿಲ್ಲೆ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಯತ್ನಾಳ್, ಗಾಂಧಿ ಮತ್ತು ನೆಹರು ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಯತ್ನಾಳ್ ತಮ್ಮ ಭಾಷಣದ ಸಮಯದಲ್ಲಿ ಹಲವಾರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಎಫ್ಐಆರ್ ನಲ್ಲಿ ಆರೋಪಿಸಲಾಗಿದೆ.
ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಲವ್ ಜಿಹಾದ್ ಅನ್ನು ಸಹ ಅವರು ಉಲ್ಲೇಖಿಸಿದ್ದಾರೆ, ಐತಿಹಾಸಿಕ ವ್ಯಕ್ತಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಈ ಭಾಷಣವು ಸುದ್ದಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕ ಟೀಕೆಗೆ ಕಾರಣವಾಯಿತು, ಕೋಮು ಸೌಹಾರ್ದತೆಯನ್ನು ಕೆರಳಿಸುವ ಪ್ರಯತ್ನ ಯತ್ನಾಳ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾಷಣದ ವೀಡಿಯೊ ರೆಕಾರ್ಡಿಂಗ್ ಪರಿಶೀಲಿಸಿ, ಪ್ರಾಥಮಿಕ ವಿಚಾರಣೆ ನಡೆಸಿ, ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾನೂನು ಅಭಿಪ್ರಾಯ ಯತ್ನಾಳ್ ವಿರುದ್ಧ ಬಿಎನ್ಎಸ್ 196, 299, 302, 352, 353 ಅಡಿ ಪೊಲೀಸರು ಸುಮೋಟೋ ಕೇಸ್ ದಾಖಲು ಮಾಡಿದ್ದಾರೆ.
ಸೆಕ್ಷನ್ 196 (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು), 299 (ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು), 302 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶಪೂರ್ವಕ ಉದ್ದೇಶದಿಂದ ಪದಗಳನ್ನು ಉಚ್ಚರಿಸುವುದು, ಇತ್ಯಾದಿ), 352 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), ಮತ್ತು 353 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ತನಿಖೆ ನಡೆಯುತ್ತಿದೆ.
ಯತ್ನಾಳ್ ಹೇಳಿದ್ದೇನು
ತಮ್ಮ ಭಾಷಣದಲ್ಲಿ ಯತ್ನಾಳ್ ಗಾಂಧೀಜಿಯನ್ನ ಭಾರತದ ರಾಷ್ಟ್ರಪಿತ ಎಂದು, ಜವಾಹರ ಲಾಲ್ ನೆಹರುರನ್ನು ಮೊದಲ ಪ್ರಧಾನಿ ಎಂದು ನಾನು ಒಪ್ಪಿಕೊಳ್ಳಲ್ಲ.
ನಮ್ಮ ದೇಶದ ಮೊದಲ ಪ್ರಧಾನಿ ನೇತಾಜಿ ಸುಭಾಷ್ ಚಂದ್ರ ಬೋಸ್. ಇವರೆಲ್ಲರೂ ದೇಶದ ಸ್ವಾತಂತ್ರ್ಯಕ್ಕಾಗಿ ಉಪವಾಸ ಮಾಡುತ್ತಿರಲಿಲ್ಲ. ಕೋಲ್ಕತ್ತಾದಿಂದ 555 ಸಿಗರೇಟ್ ತರಿಸಿಕೊಂಡು ಸೇದುತ್ತಿದ್ದರು. ಗಾಂಧಿ ಚರಕ ತಿರುಗಿಸಿದ್ದರಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತ್ತಾ? ಹಾಗಿದ್ರೆ ನಾನು ಚರಕ ತಿರುಗಿಸುತ್ತೇನೆ, ನಾಳೆ ರಾಜ್ಯದ ಸಿಎಂ ಆಗ್ತೀನಾ? ಎಂದು ಯತ್ನಾಳ್ ಪ್ರಶ್ನಿಸಿದ್ದರು.
ಅಲ್ಲದೆ ಭಾರತದಲ್ಲಿರುವ ಮುಸ್ಲಿಮರು ಒಂದೇ ಮಾತರಂ ಹೇಳಬೇಕು. ಇಲ್ಲದಿದ್ದರೆ ಗಾಂಧಿ ಕೊಟ್ಟ ಪಾಕಿಸ್ತಾನಕ್ಕೆ ಹೋಗಬೇಕೆಂದು ಹೇಳಿದ್ದರು.
