ಗದಗ :
ನಗರದ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದಲ್ಲಿ ಅವಘಡ ಸಂಭವಿಸಿ ೧೫ಕ್ಕೂ ಅಧಿಕ ಜನರು ಗಾಯಗೊಂಡಿರುವುದು ಅತ್ಯಂತ ನೋವಿನ ಸಂಗತಿ. ಗಾಯಗೊಂಡವರು ಬೇಗನೇ ಗುಣಮುಖರಾಗಲೆಂದು ಭಗವಂತನಲ್ಲಿ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಪ್ರಾರ್ಥಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡಬೇಕೆಂದು ಆಸ್ಪತ್ರೆಯ ವೈದ್ಯರಿಗೆ ಮನವಿಯನ್ನೂ ಮಾಡಿಕೊಂಡಿದ್ದಾರೆ.
ಶ್ರೀಗಳ ಮನವಿಗೆ ಸ್ಪಂದಿಸಿದ ವೈದ್ಯರು ಗಾಯಾಳುಗಳಿಗೆ ಎಲ್ಲ ರೀತಿಯಿಂದಲೂ ಚಿಕಿತ್ಸೆ ನೀಡುತ್ತಿದ್ದೇವೆ. ಎಲ್ಲರೂ ಗುಣಮುಖರಾಗುತ್ತಿದ್ದು ಚಿಂತಿಸುವ ಅಗತ್ಯ ಇಲ್ಲ ಎಂದಿದ್ದಾರೆ. ಮಾನ್ಯ ಜಿಲ್ಲಾಧಿಕಾರಿಗಳೂ ಕೂಡ ಈ ವಿಷಯದಲ್ಲಿ ವಿಶೇಷ ಆಸಕ್ತಿವಹಿಸಿ ಜಿಲ್ಲಾಸ್ಪತ್ರೆಯ ವೈದ್ಯರೊಂದಿಗೆ ಸಮಾಲೋಚಿಸುವುದಲ್ಲದೆ ಚಿಕಿತ್ಸೆಯಲ್ಲಿ ಯಾವುದೇ ಲೋಪಗಳಾಗದಂತೆ ಕಾಳಜಿ ವಹಿಸಲು ಸೂಚಿಸಿದ್ದಾರೆ.
ಈ ವಿಷಯದಲ್ಲಿ ಜಾತ್ರಾ ಮಹೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಆಡಳಿತ ಸಿಬ್ಬಂದಿಯವರು ಎಲ್ಲ ಕಡೆಗೂ ಗಮನಹರಿಸಿ ಗಾಯಾಳುಗಳ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ. ಸಾಧ್ಯವಿದ್ದ ಎಲ್ಲ ಅನುಕೂಲ ಅವರಿಗೆ ಮಾಡಿಕೊಡಲೂ ಕೂಡ ತಿಳಿಸಿರುವುದಾಗಿ ಶ್ರೀಗಳು ಪ್ರಕಟಣೆಯಲ್ಲಿ ಹೇಳಿದ್ದಾರೆ.
