ಕುಶಾಲನಗರ
ಕೊಡಗು ಜಿಲ್ಲೆಗೆ ಬುಧವಾರ ಆಗಮಿಸಿದ ಅರಣ್ಯ ಖಾತೆ ಸಚಿವ ಈಶ್ವರ ಬಿ ಖಂಡ್ರೆ ಅವರನ್ನು ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ವತಿಯಿಂದ ಸ್ವಾಗತಿಸಿ, ಮನವಿ ಪತ್ರ ಸಲ್ಲಿಸಲಾಯಿತು.
ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಬಸವ ಭವನ ನಿರ್ಮಾಣ ಮಾಡುವ ಸಂಬಂಧ ರಾಜ್ಯ ಸರ್ಕಾರ ಸೂಕ್ತ ಭೂಮಿಯೊಂದಿಗೆ ಪೂರಕ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ಅಧ್ಯಕ್ಷ ಎಚ್.ವಿ.ಶಿವಪ್ಪ ಸಚಿವರಲ್ಲಿ ಮನವಿ ಮಾಡಿದರು.
ಕೊಡಗು ಜಿಲ್ಲೆಯಲ್ಲಿ ವೀರಶೈವ–ಲಿಂಗಾಯತ ಸಮುದಾಯಕ್ಕೆ ಸೇರಿದವರು ಅತ್ಯಂತ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಅವರಿಗೊಂದು ಭವನ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಇದೆ. ಶಾಸಕರ ನಿಧಿ ಸೇರಿ ಇತರೆ ಮೂಲಗಳಿಂದ ಭವನ ನಿರ್ಮಾಣಕ್ಕೆ ಸಹಾಯಹಸ್ತ ಚಾಚುವುದಾಗಿ ಸಚಿವ ಈಶ್ವರ ಬಿ. ಖಂಡ್ರೆ ಭರವಸೆ ನೀಡಿದರು.
ಮಡಿಕೇರಿಯಲ್ಲಿರುವ ರಾಜರ ಗದ್ದುಗೆ, ಕೋಟೆ, ಅರಮನೆಗಳ ಸಂರಕ್ಷಣೆಗೆ ವಿಶೇಷ ಒತ್ತು ನೀಡಬೇಕು ಎಂದೂ ಸಚಿವರಿಗೆ ಮನವಿ ಮಾಡಲಾಗಿದೆ.
ಈ ವೇಳೆ ಮಹಾಸಭಾದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಾಂಭ ಶಿವಯ್ಯ, ಉಪಾಧ್ಯಕ್ಷ ಎಚ್.ಪಿ.ಉದಯ ಕುಮಾರ್, ತಾಲ್ಲೂಕು ವೀರಶೈವ ಮಹಾಸಭಾ ಅಧ್ಯಕ್ಷ ಎಚ್.ಎಂ.ಮಧುಸೂಧನ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಮೂರ್ತಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಮೋಹನ್, ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಮುಖಂಡರಾದ ಕೆ.ಪಿ.ಪರಮೇಶ್, ಎಂ.ಎಸ್.ಗಣೇಶ್, ಎಂ.ಎಸ್.ಲೋಕೇಶ್, ಟಿ.ಜಿ.ಪ್ರೇಮ್ ಕುಮಾರ್, ಎಪಿಸಿಎಂಎಸ್ ಅಧ್ಯಕ್ಷ ಎಚ್.ಬಿ.ಚಂದ್ರಪ್ಪ, ತೊರೆನೂರು ಸಹಕಾರ ಸಂಘದ ಅಧ್ಯಕ್ಷ ಟಿ. ಬಿ.ಜಗದೀಶ್, ಶಿವಲಿಂಗಪ್ಪ, ಬಿ.ಬಿ.ಲೋಕೇಶ್, ಕೊಪ್ಪಾ ಉದ್ಯಮಿ ನಟ ಭಾಗವಹಿಸಿದ್ದರು.
