ಪ್ರಯತ್ನದ ಫಲ ಸಿಹಿಯಾಗಿರುತ್ತದೆ: ಕೋಸಂಬೆ
ಭಾಲ್ಕಿ:
ವಿದ್ಯಾರ್ಥಿಗಳು ಶೈಕ್ಷಣಿಕ ಜೀವನದಲ್ಲಿ ಸಾಧನೆಗೈಯಲು ನಿರಂತರ ಪ್ರಯತ್ನ ಮಾಡುತ್ತಿರಬೇಕು. ಪ್ರಯತ್ನದ ಫಲ ಯಾವಾಗಲೂ ಸಿಹಿಯಾಗಿರುತ್ತದೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠದ ನಿರ್ದೇಶಕ ಶಶಿಧರ ಕೋಸಂಬೆ ಹೇಳಿದರು.

ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪಿಯು ಕಾಲೇಜಿನಲ್ಲಿ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು ಅಂಗವಿಕಲರ ಕೋಟಾದಲ್ಲಿ ದೇಶಕ್ಕೆ ಮೊದಲ ರ್ಯಾಂಕ್ ಪಡೆದ ವಿದ್ಯಾರ್ಥಿ ವಿಶ್ವರಾಜನನ್ನು ಸನ್ಮಾನಿಸಿ ಅವರು ಮಾತನಾಡಿದರು.
ಸಂಸ್ಥೆಯ ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ ಮಾತನಾಡಿ, ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮ ಸಂಸ್ಕಾರದೊಂದಿಗೆ ಗುಣಾತ್ಮಕ ಶಿಕ್ಷಣವನ್ನು ಪೂಜ್ಯ ಬಸವಲಿಂಗ ಪಟ್ಟದ್ದೇವರು ಧಾರೆ ಎರೆಯುತ್ತಿರುವುದರ ಫಲವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಮಹೋನ್ನತ ಸಾಧನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಆಡಳಿತಾಧಿಕಾರಿ ಮೋಹನರೆಡ್ಡಿ, ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ ಸೇರಿದಂತೆ ಉಪನ್ಯಾಸಕರು ಇದ್ದರು.
