ಬೀದರ
ಜೂನ್ 28ರಂದು ಬಸವಕಲ್ಯಾಣದಲ್ಲಿ ಹಿಂದುತ್ವವಾದಿ ಸಂಘಟನೆಗಳು ಆಯೋಜಿಸಲು ಪ್ರಯತ್ನಿಸುತ್ತಿರುವ ಹಿಂದೂ ಸಮಾವೇಶದಲ್ಲಿ ಭಾಗವಹಿಸಲು ಬರುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನ್ನೇರಿ ಸ್ವಾಮಿಯನ್ನು ಬಸವಕಲ್ಯಾಣಕ್ಕೆ ಬಾರದಂತೆ ತಡೆಯಬೇಕೆಂದು ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿಗೆ ಮನವಿ ಮಾಡಿದೆ.
ಭಾಲ್ಕಿಯ ತಹಶೀಲ್ದಾರ ಅವರ ಮೂಲಕ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಬಸವ ಭಕ್ತರನ್ನು ಬಸವ ತಾಲಿಬಾನಿ ಎಂದು ಪದ ಪ್ರಯೋಗ ಮಾಡಿ ಅವಮಾನಿಸಿರುವುದು ಹಾಗೂ ಬಸವತತ್ವ ಮತ್ತು ಶರಣ ಸಂಸ್ಕೃತಿಯನ್ನು ನಾಡಿನಾದ್ಯಂತ ಪ್ರಚಾರ ಮಾಡುತ್ತಿರುವ ಪೂಜ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು, ವಚನಗಳನ್ನು ತಿರುಚಿ ಹೇಳುತ್ತಿರುವುದು ಖಂಡನೀಯವಾಗಿದೆ ಎಂದು ತಿಳಿಸಲಾಗಿದೆ.
ಸುಪ್ರೀಂಕೋರ್ಟ್ನಿಂದಲೂ ಟೀಕೆಗೆ ಗುರಿಯಾಗಿರುವ ಕನ್ನೇರಿ ಸ್ವಾಮಿಯವರ ನಡೆಯಿಂದ ಬಸವ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ಆದ್ದರಿಂದ ಕನ್ನೇರಿ ಸ್ವಾಮಿಗೆ ಬಸವಕಲ್ಯಾಣ ಪ್ರವೇಶಕ್ಕೆ ನಿಷೇಧ ಹೇರಬೇಕು. ಸರ್ಕಾರ ಹಾಗೂ ಜಿಲ್ಲಾಡಳಿತವು ಬಸವ ಭಕ್ತರ ಭಾವನೆಗಳು ಮತ್ತು ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸೂಕ್ತ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳಬೇಕು. ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆಗೆ ಧಕ್ಕೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ಕನ್ಹೇರಿ ಸ್ವಾಮೀಜಿಯವರ ಬಸವಕಲ್ಯಾಣ ಪ್ರವೇಶಕ್ಕೆ ಅವಕಾಶ ನೀಡದಂತೆ ಸೂಕ್ತ ಕ್ರಮವಹಿಸಬೇಕು ಎಂದು ಆಗ್ರಹಿಸಲಾಗಿದೆ.
ಒಂದು ವೇಳೆ ಕಾರ್ಯಕ್ರಮಕ್ಕೆ ಅನುಮತಿ ನೀಡಿದರೆ, ಬಸವ ಭಕ್ತರ ಭಾವನೆಗಳಿಗೆ ಧಕ್ಕೆಯಾಗುವ ಸಾಧ್ಯತೆ ಇರುವುದರ ಜೊತೆಗೆ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಸವಾಲುಗಳು ಎದುರಾಗುವ ಸಾಧ್ಯತೆ ಇದೆ. ಹಾಗಾಗಿ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಕನ್ಹೇರಿ ಸ್ವಾಮಿಗಳು ಬಸವಕಲ್ಯಾಣಕ್ಕೆ ಜೂ.28 ರಂದು ಪ್ರವೇಶ ಮಾಡಿದರೆ ಜಿಲ್ಲಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ.
ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಗಗನ್ ಫುಲೆ, ಪ್ರಧಾನ ಕಾರ್ಯದರ್ಶಿ ಕಲ್ಲಪ್ಪ ಮರೂರ, ಶ್ರೀಮಂತ ಭೋಸ್ಲೆ ಹಾಗೂ ಜೈವರ್ಧನ ಸೇರಿದಂತೆ ಇತರರು ಇದ್ದರು.
