ಹೆಬ್ರಿ :
ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ, ಅಕ್ಷರ ಸಾಹಿತ್ಯ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಶರಣ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ, ‘ವಚನ ಸಾಹಿತ್ಯ ಸಂಭ್ರಮ’ ಹಾಗೂ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮವು ಶನಿವಾರ ಶಾಲೆಯ ಸಭಾಂಗಣದಲ್ಲಿ ಸಂಭ್ರಮದಿಂದ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ವಿಜೇಂದ್ರ ಶೆಟ್ಟಿ ವಹಿಸಿದ್ದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಿರಂಜನ ಚೋಳಯ್ಯ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಕದಳಿ ವೇದಿಕೆಯ ಅಧ್ಯಕ್ಷೆ ಡಾ. ಗಿರಿಜಾ ಅತ್ತಿಗೇರಿ, ಹೆಬ್ರಿ ತಾಲೂಕು ಕದಳಿ ವೇದಿಕೆಯ ಅಧ್ಯಕ್ಷೆ ಶಾರದಾ ವಿನಯ, ಉಪಪ್ರಾಂಶುಪಾಲ ದಿವಾಕರ ಮರಕಾಲ ಎಸ್., ಹಿರಿಯ ಶಿಕ್ಷಕ ವೆಂಕಟರಮಣ ಕಲ್ಕೂರ, ಅಕ್ಷರ ಸಾಹಿತ್ಯ ಸಂಘದ ಸಂಚಾಲಕ ಮಂಜುನಾಥ ಕುಲಾಲ, ಅಕ್ಷರ ಸಾಹಿತ್ಯ ಸಂಘದ ಅಧ್ಯಕ್ಷೆ ಸಿಂಚನಾ ಭಾಗಿಗಳಾಗಿದ್ದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಿರಂಜನ ಚೋಳಯ್ಯ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡುತ್ತ, “ವಚನ ಸಾಹಿತ್ಯವು ಸಮಾಜಕ್ಕೆ ಸಮಾನತೆ, ಕಾಯಕನಿಷ್ಠೆ ಮತ್ತು ಮಾನವೀಯ ಮೌಲ್ಯಗಳನ್ನು ಬೋಧಿಸಿದ ಅಪೂರ್ವ ಸಾಹಿತ್ಯವಾಗಿದೆ. ಶರಣರ ವಿಚಾರಗಳು ಮತ್ತು ವಚನಗಳ ಸಂದೇಶಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ” ಎಂದು ಹೇಳಿದರು.

ಜಿಲ್ಲಾ ಕದಳಿ ವೇದಿಕೆಯ ಅಧ್ಯಕ್ಷೆ ಡಾ. ಗಿರಿಜಾ ಅತ್ತಿಗೇರಿ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಹಾಗೂ ಸಾಂಸ್ಕೃತಿಕ ಮನೋಭಾವವನ್ನು ಬೆಳೆಸುವಲ್ಲಿ ಶಾಲೆಯ ಅಕ್ಷರ ಸಾಹಿತ್ಯ ಸಂಘ ಮತ್ತು ಶರಣ ಸಾಹಿತ್ಯ ಪರಿಷತ್ತಿನ ಕಾರ್ಯ ಮೆಚ್ಚುವಂತಹುದು. ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ಹೊರಹಾಕಬೇಕು”ಎಂದರು.
ಅಕ್ಷರ ಸಾಹಿತ್ಯ ಸಂಘದ ಸಂಚಾಲಕ ಮಂಜುನಾಥ ಕುಲಾಲ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತು ಆಡಿದರು. ಸಮಾಜ ವಿಜ್ಞಾನ ಶಿಕ್ಷಕ ಪ್ರವೀಣಕುಮಾರ ಶೆಟ್ಟಿ ವಂದಿಸಿದರು. ವಿದ್ಯಾರ್ಥಿನಿಯರಾದ ಸಾನಿಕಾ ಪೂಜಾರಿ, ಇಂಚನಾ, ಸಾನಿಕಾ ಹಾಗೂ ಮಾನ್ವಿತಾ ನಿರೂಪಿಸಿದರು.

ವಿಜೇತರ ಪಟ್ಟಿಯನ್ನು ಕನ್ನಡ ಭಾಷಾ ಶಿಕ್ಷಕಿ ಸಂಗೀತಾ ಶೆಟ್ಟಿ ವಾಚಿಸಿದರು.
ಪದಾಧಿಕಾರಿಗಳು, ಅಧ್ಯಾಪಕ-ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವಚನ ಗಾಯನ, ಭಾಷಣ ನಡೆಯಿತು. ವಚನ ಸಾಹಿತ್ಯದ ಸಂಭ್ರಮ ಸಾರಿತು.
ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/LcykjUHphtT2VDkfrKC3PM

ಶರಣು ಶರಣಾರ್ಥಿ