ಅನುಭವ ಮಂಟಪ ಶಾಲೆಯಲ್ಲಿ ಸ್ವಾತಂತ್ರ್ಯ ದಿನದ ಸಂಭ್ರಮ
ಆಳಂದ:
ಪಟ್ಟಣದ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳವರ ಅನುಭವ ಮಂಟಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಪೂಜ್ಯ ಕೋರಣೇಶ್ವರ ಸ್ವಾಮಿಗಳು ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಆಶೀರ್ವಚನ ನೀಡುತ್ತಾ, ಅಪಾರ ತ್ಯಾಗ, ಬಲಿದಾನಗಳ ಫಲವಾಗಿ ನಮಗೆ, ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ.

ದೇಶಕ್ಕಿಂತ ಧರ್ಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದರೆ, ನಮ್ಮ ಸ್ವಾತಂತ್ರ್ಯವು ಎರಡನೇ ಬಾರಿಗೆ ಅಪಾಯಕ್ಕೆ ಸಿಲುಕುತ್ತದೆ, ಮತ್ತು ಬಹುಶಃ ಶಾಶ್ವತವಾಗಿ ನಶಿಸಿಹೋಗುವುದು ಖಚಿತ.
ಈ ಪರಿಸ್ಥಿತಿಯಿಂದ ನಾವೆಲ್ಲರೂ ದೃಢವಾಗಿ ನಮ್ಮನ್ನು ರಕ್ಷಿಸಿಕೊಳ್ಳಬೇಕಾಗಿದೆ. ನಮ್ಮ ರಕ್ತದ ಕೊನೆಯ ಹನಿಯವರೆಗೂ ಸ್ವಾತಂತ್ರ್ಯವನ್ನು ರಕ್ಷಿಸಲು ನಾವು ದೃಢ ಸಂಕಲ್ಪ ಮಾಡಬೇಕಾಗಿದೆ ಎಂದು ಸ್ವಾಮೀಜಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಅಭಿನಂದನ ಬೇಡಗೆ ವಹಿಸಿದ್ದರು.
ಗಣ್ಯರಾದ ಮಲ್ಲಿನಾಥ ಯಲಶೆಟ್ಟಿ, ಸುಭಾಷ ಪಾಟೀಲ ಹಾಗೂ ಶರಣಕುಮಾರ ಯಲಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಧ್ವಜಾರೋಹಣದ ನಂತರ ಶಾಲಾ ಮಕ್ಕಳಿಂದ ದೇಶಭಕ್ತಿ ಬಿಂಬಿಸುವ ಆಕರ್ಷಕ ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳು ಜರುಗಿದವು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕವೃಂದ, ಸಿಬ್ಬಂದಿ, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
