ದಾವಣಗೆರೆ:
ಇಂದಿನ ದಿನಮಾನಗಳಲ್ಲಿ ಯುವಕ-ಯುವತಿಯರು ಮೊಬೈಲ್ ಬಳಕೆಯಿಂದ ದೂರ ಉಳಿದು, ಉತ್ತಮ ಬದುಕು ಕಟ್ಟಿಕೊಳ್ಳಲು ವಚನ ಸಾಹಿತ್ಯದ ಅರಿವಿನಿಂದ ಮಾತ್ರ ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ಡಾ. ಮಂಜುನಾಥ ಕುರ್ಕಿ ಅವರು ಹೇಳಿದರು.
ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಇಂದಿನ ಮಕ್ಕಳಲ್ಲಿ ಜೀವನ ಮೌಲ್ಯಗಳನ್ನು ಬಿತ್ತುವ ಕೆಲಸವನ್ನು ಶರಣ ಸಾಹಿತ್ಯ ಪರಿಷತ್ತು ಮಾಡಬೇಕಿದೆ ಎಂದರು.

ಶಾಲಾ ಕಾಲೇಜುಗಳಲ್ಲಿ ವಚನ ಪ್ರಬಂಧ ಸ್ಪರ್ಧೆ, ವಚನ ಕಂಠಪಾಠ ಸ್ಪರ್ಧೆ, ವಚನ ರಸಪ್ರಶ್ನೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಚನ ಸಾಹಿತ್ಯ ಬಿತ್ತರಿಸುವ ಕೆಲಸವನ್ನು ಶರಣ ಸಾಹಿತ್ಯ ಪರಿಷತ್ತು ಮತ್ತು ಕದಳಿ ಮಹಿಳಾ ವೇದಿಕೆಯವರು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ.
ಗ್ರಾಮೀಣ ಭಾಗಗಳಲ್ಲಿ ಕಾರ್ಯಕ್ರಮಗಳನ್ನು ವಿಸ್ತರಿಸಿದರೆ ಒಳ್ಳೆಯದು. ಆ ಮೂಲಕ ಗ್ರಾಮೀಣ ಮಕ್ಕಳು ಶರಣ ಸಂಸ್ಕೃತಿ ಹೊಂದಲು ಸಾಧ್ಯವಾಗುತ್ತದೆ. 12ನೇ ಶತಮಾನದ ಶಿವಶರಣರ ಆಶಯವೂ ಅದೇ ಆಗಿತ್ತು. ಸಮಾಜಕ್ಕೆ ವಚನ ಸಾಹಿತ್ಯದ ಕೊಡುಗೆ ಅಪಾರವಾಗಿದೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಅಣಬೇರು ರಾಜಣ್ಣ ಅವರು, ವಚನಕಾರರ ಆಶಯದಂತೆ ನಾವೆಲ್ಲರೂ ಸಾರ್ಥಕ ಜೀವನ ನಡೆಸಬೇಕಾಗಿದೆ. ಸತ್ಯಶುದ್ಧ ಕಾಯಕ ಮತ್ತು ದಾಸೋಹ ಮಾಡಿದರೆ ಸಾಕು. ಶರಣರ ಆಶಯದ ನಡೆ ನುಡಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಬಸವಪರ ಸಂಘಟನೆಗಳು ದಾವಣಗೆರೆಯಲ್ಲಿ ಉತ್ತಮ ಕೆಲಸ ಮಾಡುತ್ತಿವೆ, ಅದರಲ್ಲೂ ಶರಣ ಸಾಹಿತ್ಯ ಪರಿಷತ್ತು ಮತ್ತು ಕದಳಿ ಮಹಿಳಾ ವೇದಿಕೆಯವರು ವಚನ ಸಾಹಿತ್ಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಹೇಳಿ ಶರಣ ಸಾಹಿತ್ಯ ಪರಿಷತ್ತಿನ ಎಲ್ಲಾ ಚಟುವಟಿಕೆಗಳಿಗೆ ಪ್ರೋತ್ಸಾಹ ಕೊಡಲಾಗುವುದು ಎಂದು ತಿಳಿಸಿದರು.
ರಾಜು ಅವರು ಅಭಿನಂದನಾ ನುಡಿಗಳನ್ನಾಡಿದರು. ದಾವಣಗೆರೆ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನಿಂದ ಅಣಬೇರು ರಾಜಣ್ಣ ಅವರನ್ನು ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಶ್ರೀ ನಾರದಮುನಿ ಸೇವಾ ಟ್ರಸ್ಟ್ ವತಿಯಿಂದ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹೆಚ್. ಕೆ. ಲಿಂಗರಾಜು ಮತ್ತು ನಿಕಟಪೂರ್ವ ಅಧ್ಯಕ್ಷರಾದ ಕೆ. ಬಿ. ಪರಮೇಶ್ವರಪ್ಪ ಅವರನ್ನು ಅಭಿನಂದಿಸಲಾಯಿತು.
ಕದಳಿ ಮಹಿಳಾ ವೇದಿಕೆಯ ನಿರ್ಮಲ ಶಿವಕುಮಾರ, ವಿನೋದ ಅಜಗಣ್ಣನವರ, ವಿಜಯ, ಭರಮಪ್ಪ ಮೈಸೂರು, ಆರ್. ಸಿದ್ದೇಶಪ್ಪ, ಬಿ. ಟಿ. ಪ್ರಕಾಶ, ಜಿ. ಎಂ. ಕುಮಾರಪ್ಪ, ಕೆ. ಬಿ. ಬಸಲಿಂಗಪ್ಪ, ಮೆಳ್ಳೆಕಟ್ಟೆ ಸಂತೋಷ, ಪಲ್ಲಾಗಟ್ಟೆ ನಾಗರಾಜ, ಅವಿನಾಶ ಮುಂತಾದವರು ಇದ್ದರು.
ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/JtGWW38lyFrDf4kKL0aXGH
