ಅಕ್ಕ ಅನ್ನಪೂರ್ಣತಾಯಿ ಸ್ಮರಣೋತ್ಸವ ಮೇ 23ರಿಂದ: ಪ್ರಭುದೇವ ಸ್ವಾಮೀಜಿ

ಬೀದರ

ಲಿಂಗಾಯತ ಮಹಾಮಠದ ವತಿಯಿಂದ ಇಲ್ಲಿಯ ಬಸವಗಿರಿಯಲ್ಲಿ ಮೇ 23 ಹಾಗೂ 24 ರಂದು ಅಕ್ಕ ಅನ್ನಪೂರ್ಣತಾಯಿ ಅವರ ಪ್ರಥಮ ಸ್ಮರಣೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ ಹೇಳಿದರು.

ಬಸವಗಿರಿಯಲ್ಲಿ ಭವ್ಯ ವೇದಿಕೆ, ಮಂಟಪ ನಿರ್ಮಾಣ, ವಸತಿ, ಪ್ರಸಾದ ಸೇರಿದಂತೆ ಅಗತ್ಯ ಸಿದ್ಧತೆಗಳು ಭರದಿಂದ ನಡೆದಿವೆ. ವಿವಿಧ ಸಮಿತಿಗಳ ಪದಾಧಿಕಾರಿಗಳು ಸ್ಮರಣೋತ್ಸವದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ ಎಂದು ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ ಬೇರೆ ಬೇರೆ ಜಿಲ್ಲೆಗಳು ಹಾಗೂ ನೆರೆ ರಾಜ್ಯಗಳ ಭಕ್ತರಿಗೆ ಬಸವಗಿರಿಯ ದಾಸೋಹ ಭವನದಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ. ಎರಡು ದಿನ ನಿರಂತರ ಪ್ರಸಾದ ದಾಸೋಹ ಇರಲಿದೆ ಎಂದು ಹೇಳಿದರು.

ಬೀದ‌ರ, ಕೊಪ್ಪಳ, ವಿಜಯಪುರ, ಹೊಸಪೇಟೆ, ಧಾರವಾಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಚಾರ ಸಭೆಗಳನ್ನು ನಡೆಸಿ, ಅಕ್ಕನವರ ಭಕ್ತರು ಹಾಗೂ ಬಸವಾನುಯಾಯಿಗಳನ್ನು ಸ್ಮರಣೋತ್ಸವಕ್ಕೆ ಆಹ್ವಾನಿಸಲಾಗಿದೆ. ರಾಜ್ಯದ ಜಿಲ್ಲೆಗಳು, ನೆರೆಯ ತೆಲಂಗಾಣ ಹಾಗೂ ಮಹಾರಾಷ್ಟ್ರ ಸೇರಿದಂತೆ ಆರು ಸಾವಿರ ಜನ ಸ್ಮರಣೋತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

23 ರಂದು ಸಂಜೆ 5ಕ್ಕೆ ನಡೆಯುವ ಸಮಾರಂಭದಲ್ಲಿ ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದದ ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ ಸ್ಮರಣೋತ್ಸವಕ್ಕೆ ಚಾಲನೆ ನೀಡುವರು. ಬಸವಕಲ್ಯಾಣದ ಗುಣತೀರ್ಥವಾಡಿಯ ಬಸವಪ್ರಭು ಸ್ವಾಮೀಜಿ ಅನುಭಾವ ನೀಡುವರು. ಭಾತಂಬ್ರಾದ ಜಗದ್ಗುರು ಶಿವಯೋಗೀಶ್ವರ ಸ್ವಾಮೀಜಿ ಸಾನಿಧ್ಯ, ಧಾರವಾಡ ಡಾ. ಬಸವಾನಂದ ಸ್ವಾಮೀಜಿ, ಬೇಲೂರಿನ ಪಂಚಾಕ್ಷರಿ ಸ್ವಾಮೀಜಿ, ಸಿಂಧನಕೇರಾದ ಹೊನ್ನಲಿಂಗ ಸ್ವಾಮೀಜಿ ಸಮ್ಮುಖ, ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷ ಜೈರಾಜ ಖಂಡ್ರೆ ಅಧ್ಯಕ್ಷತೆ ವಹಿಸುವರು. ಬಳ್ಳಾರಿಯ ಶಿವಪ್ರಕಾಶ ಅಂಗಡಿ ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳುವರು ಎಂದು ಹೇಳಿದರು.

ಇದಕ್ಕೂ ಮುನ್ನ ಬೆಳಿಗ್ಗೆ 7.30ಕ್ಕೆ ಸಾಮೂಹಿಕ ವಚನ ಪಾರಾಯಣ ಹಾಗೂ ಅನುಭಾವ ಗೋಷ್ಠಿ ಜರುಗಲಿದೆ. ಬಸವಕಲ್ಯಾಣದ ಜಗದ್ಗುರು ಸಿದ್ಧರಾಮ ಸ್ವಾಮೀಜಿ ಸಾನಿಧ್ಯ ವಹಿಸುವರು. ಬಸವಕಲ್ಯಾಣದ ಅನುಭವ ಮಂಟಪದ ಸಂಚಾಲಕ ಶಿವಾನಂದ ಸ್ವಾಮೀಜಿ ಹಾಗೂ ಭಾಲ್ಕಿಯ ಮಹಾಲಿಂಗ ಸ್ವಾಮೀಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಭಾಲ್ಕಿಯ ಬಸವಲಿಂಗ ಸ್ವಾಮೀಜಿ, ಬಸವ ತತ್ವ ಪ್ರಚಾರಕ ಸಿದ್ರಾಮಪ್ಪ ಕಪಲಾಪುರ ಅವರ ಸಮ್ಮುಖ, ಲಿಂಗಾಯತ ಮಹಾಮಠದ ಪರುಷ ಕಟ್ಟೆಯ ಚನ್ನಬಸವಣ್ಣ ಅಧ್ಯಕ್ಷತೆ ವಹಿಸುವರು. ಧಾರವಾಡದ ಬಸವರಾಜ ಹಡಪದ ಷಟ್ ಸ್ಥಲ ಧ್ವಜಾರೋಹಣ ಮಾಡುವರು ಎಂದು ತಿಳಿಸಿದರು.

24 ರಂದು ಬೆಳಿಗ್ಗೆ 11ಕ್ಕೆ ಸಮವಸ್ತ್ರಧಾರಿ 770 ಶರಣೆಯರಿಂದ ಅಕ್ಕನ ಯೋಗಾಂಗ ತ್ರಿವಿಧಿ ಪಠಣ ನಡೆಯಲಿದೆ. ಕೂಡಲಸಂಗಮದ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಡಾ. ಗಂಗಾದೇವಿ ‘ರೋಟರಿ ಫುಡ್ ಆನ್ ವೀಲ್ಸ್- ಅನ್ನಪೂರ್ಣ’ ಯೋಜನೆಗೆ ಚಾಲನೆ ನೀಡುವರು. ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಸಾನಿಧ್ಯ, ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ ನೇತೃತ್ವ, ಆಳಂದದ ಕೋರಣೇಶ್ವರ ಸ್ವಾಮೀಜಿ ಸಮ್ಮುಖ, ನೀಲಮ್ಮನ ಬಳಗದ ನೀಲಮ್ಮ ರೂಗನ್ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.

ವಿಜಯಪುರದ ಡಾ. ಜೆ.ಎಸ್. ಪಾಟೀಲ ಲಿಂಗಾಯತ ಚಳವಳಿ ಐತಿಹಾಸಿಕ ಹಿನ್ನೆಲೆ ಕುರಿತು ಮುಖ್ಯ ಅನುಭಾವ ಮಂಡಿಸುವರು. ಹೈಕೋರ್ಟ್ ನ್ಯಾಯವಾದಿ ಹಾಗೂ ಲೋಕಾಯುಕ್ತ ವಿಶೇಷ ಪಿ.ಪಿ. ಸಂತೋಷ್ ಎಸ್. ನಾಗರಾಳಿ ಮುಖ್ಯ ಅತಿಥಿಗಳಾಗಿ, ಖೇಳಗಿಯ ಶಿವಲಿಂಗ ಸ್ವಾಮೀಜಿ, ಕಲಬುರಗಿಯ ಮಾತೆ ಪ್ರಭುಶ್ರೀ, ಮನ್ನಾಎಕ್ಕೆಳ್ಳಿಯ ಮಾತೆ ಮೈತ್ರಾದೇವಿ ವಿಶೇಷ ಆಮಂತ್ರಿತರಾಗಿರುವರು ಎಂದು ತಿಳಿಸಿದರು.

ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ. ಹುಲಸೂರಿನ ಶಿವಾನಂದ ಸ್ವಾಮೀಜಿ, ಭಾಲ್ಕಿಯ ಗುರುಬಸವ ಪಟ್ಟದ್ದೇವರು ಸಾನಿಧ್ಯ. ಗುರುಮಠಕಲ್‌ನ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ, ಬೇಲೂರಿನ ಶಿವಕುಮಾರ ಸ್ವಾಮೀಜಿ ಸಮ್ಮುಖ, ಕಲಬುರಗಿ ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಶರಣಬಸವ ಮಠಪತಿ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು. ಬಸವಕಲ್ಯಾಣದ ವಿಶ್ರಾಂತ ಜಿಲ್ಲಾ ನ್ಯಾಯಾಧೀಶ ಸುಭಾಷಚಂದ್ರ ನಾಗರಾಳೆ ಮುಖ್ಯ ಅತಿಥಿ, ಠಾಣಾಕುಶನೂರದ ಸಿದ್ಧಲಿಂಗ ಸ್ವಾಮೀಜಿ, ಸಾಯಗಾಂವ್‌ನ ಶಿವಾನಂದ ಸ್ವಾಮೀಜಿ, ಹುಡಗಿಯ ಚನ್ನಮಲ್ಲದೇವರು ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳುವರು.

ನೃತ್ಯಾಂಗನ ನಾಟ್ಯ ಮತ್ತು ಕಲಾ ಕೇಂದ್ರದ ಪೂರ್ಣಚಂದ್ರ ಮೈನಾಳೆ ಹಾಗೂ ತಂಡದವರು ಕಲ್ಯಾಣ ಕ್ರಾಂತಿ ರೂಪಕ ಹಾಗೂ ವಚನ ನೃತ್ಯ ಪ್ರದರ್ಶಿಸುವರು ಎಂದು ತಿಳಿಸಿದರು.

ಸಾಹಿತಿ ರಮೇಶ ಮಠಪತಿ, ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಅಧ್ಯಕ್ಷ ಶಿವಕುಮಾರ ಪಾಖಾಲ್, ಲಿಂಗಾಯತ ಮಹಾಮಠದ ಕಾರ್ಯದರ್ಶಿ ಚನ್ನಬಸಪ್ಪ ಹಂಗರಗಿ, ಪ್ರಮುಖರಾದ ಅಶೋಕ ಎಲಿ, ಪ್ರಕಾಶ ಮಠಪತಿ, ಚಂದ್ರಶೇಖರ ಹೆಬ್ಬಾಳೆ, ಆರ್.ಕೆ. ಪಾಟೀಲ, ಸಿ.ಎಸ್. ಪಾಟೀಲ, ಪ್ರಭು ತಟಪಟ್ಟಿ, ನೀಲಮ್ಮ ರೂಪನ್, ಅಭಿಷೇಕ ಮಠಪತಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/KW7PgYimGT7HL73bAEKzSR

Share This Article
Leave a comment

Leave a Reply

Your email address will not be published. Required fields are marked *