‘ಅನುಭವ ಮಂಟಪ – ಬಸವಾದಿ ಶರಣರ ವೈಭವ’ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’
ಇಳಕಲ್
‘ಬಸವಾದಿ ಶರಣರ ವಚನಗಳನ್ನು ತಿರುಚಿ ವಚನ ದರ್ಶನ ಪುಸ್ತಕ ಬರೆದ ಆರ್.ಆರ್.ಎಸ್ ನವರಿಗೆ ಸೂಕ್ತ ಸಂದೇಶ ನೀಡಲು ಇದೇ 29, 30 ರಂದು ಕೂಡಲಸಂಗಮದಲ್ಲಿ ನಡೆಯುವ ಬಸವ ಜಯಂತಿ ಹಾಗೂ ‘ಅನುಭವ ಮಂಟಪ – ಬಸವಾದಿ ಶರಣರ ವೈಭವ’ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಅವರು ಗುರುವಾರದಂದು ತಮ್ಮ ನಿವಾಸದಲ್ಲಿ ನಡೆದ ಕಾಂಗ್ರೆಸ್ ಪದಾಧಿಕಾರಿಗಳ, ಜನಪ್ರತಿನಿಧಿಗಳ, ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬಸವಣ್ಣನವರ ಕಟ್ಟಾ ಅನುಯಾಯಿ. ಬಸವಾದಿ ಶರಣರ ತತ್ವಾದರ್ಶಗಳಂತೆ ಜನಪರ ಆಡಳಿತ ನೀಡಿದವರು. ಅವರು ರಾಜ್ಯದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ಕೂಡಲಸಂಗಮದಲ್ಲಿ ಅರ್ಥಪೂರ್ಣವಾಗಿ ಆಚರಿಸಿ, ಆ ಮೂಲಕ ಬಸವಾದಿ ಶರಣರ ಸಂದೇಶವನ್ನು ರಾಜ್ಯಕ್ಕೆಲ್ಲಾ ತಲುಪಿಸಲು ನಿರ್ಧರಿಸಿದ್ದಾರೆ.
ಮುಖ್ಯಮಂತ್ರಿ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ೨ ದಿನ ಈ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಿದ್ದಾರೆ. ವಚನ ಗೋಷ್ಟಿ, ವಚನ ಗಾಯನ, ವಚನ ನೃತ್ಯ, ನಾಟಕ, ವಿಚಾರ ಸಂಕಿರಣ ನಡೆಯಲಿವೆ.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಲ್ಲದೇ ಉಪಮುಖ್ಯಮಂತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಇತರ ಸಚಿವರು, ಶಾಸಕರು, ಸ್ವಾಮೀಜಿಗಳು, ನಟ ಡಾಲಿ ಧನಂಜಯ, ಸಂಗೀತ ನಿರ್ದೇಶಕ ಹಂಸಲೇಖ, ಗಾಯಕಿ ಎಂ.ಡಿ. ಪಲ್ಲವಿ ಸೇರಿದಂತೆ ಅನೇಕ ಕಲಾವಿದರು, ವಿದ್ವಾಂಸರು, ಚಿಂತಕರು ಭಾಗವಹಿಸುವರು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಎರಡೂ ದಿನ ಭಾಗವಹಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ, ಉಪಾಧ್ಯಕ್ಷೆ ಕಾಳಮ್ಮ ಜಕ್ಕಾ, ಸರ್ವಸದಸ್ಯರು, ಹುನಗುಂದ ಇಳಕಲ್ ಅವಳಿ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.