ಬೀದರ್
ಮುಂದಿನ ವರ್ಷ ಬಸವ ಜಯಂತಿಯೊಳಗೆ ಈ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು, ಎಂದು ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.
ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ತಮ್ಮ ಕೋರಿಕೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೆಚ್ಚುವರಿಯಾಗಿ 50 ಕೋಟಿ ಪೂರಕ ಬಜೆಟ್ ನಲ್ಲಿ ನೀಡಿ, ಬಿಡುಗಡೆ ಮಾಡಿದ್ದಾರೆ ಎಂದು ಇತ್ತೀಚೆಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2027ರ ಮಾರ್ಚ್ ತಿಂಗಳೊಳಗೆ ಆಧುನಿಕ ಅನುಭವ ಮಂಟಪ ಕಾಮಗಾರಿ ಪೂರ್ಣಗೊಳಿಸುವುದು ಸರ್ಕಾರದ ಸಂಕಲ್ಪವಾಗಿದೆ, ಎಂದು ಹೇಳಿದ್ದಾರೆ.
ಕಾಮಗಾರಿ ಶುರುವಾದಾಗ ಅನುಭವ ಮಂಟಪದ ಅನಾವರಣವನ್ನು ಡಿಸೆಂಬರ್ 2025ಕ್ಕೆ ನಡೆಸುವ ಗುರಿಯನ್ನು ಹೊಂದಲಾಗಿತ್ತು. ಆದರೆ ಸರಕಾರ ಗುತ್ತಿಗೆದಾರರಿಗೆ ಸಕಾಲಿಕವಾಗಿ ಹಣ ಪಾವತಿ ಮಾಡದಿರುವ ಕಾರಣ ನಿರ್ಮಾಣ ಕಾಮಗಾರಿಯು ವಿಳಂಬವಾಗಿದೆ.
ಭಾಲ್ಕಿ ಸ್ವಾಮೀಜಿ ಸಂತಸ
ಅನುಭವ ಮಂಟಪ ಕಟ್ಟಡ ನಿರ್ಮಾಣ ಕಾಮಗಾರಿಗೆ ರಾಜ್ಯ ಸರಕಾರ ಹೆಚ್ಚುವರಿಯಾಗಿ 50 ಕೋಟಿ ರೂ. ಬಿಡುಗಡೆ ಮಾಡಿರುವುದು ಸಂತಸ ತರಿಸಿದೆ ಎಂದು ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದೇವರು ಹಾಗೂ ಪೀಠಾಧಿಪತಿ ಗುರುಬಸವ ಪಟ್ಟದೇವರು ಪ್ರಕಟಣೆ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಸರಕಾರದಲ್ಲಿ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಅನುಭವ ಮಂಟಪ ಕಟ್ಟಡ ನಿರ್ಮಾಣದ ನೀಲನಕ್ಷೆ ಸಿದ್ಧಪಡಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯನವರ ಸರಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಈಶ್ವರ್ ಖಂಡ್ರೆ ಅವರು ಮುಂದುವರೆದು ಅನುಭವ ಮಂಟಪಕ್ಕೆ ಅನುದಾನದ ಕೊರತೆ ಆಗದಂತೆ ನೋಡಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ, ಅನುಭವ ಮಂಟಪ ಲೋಕಾರ್ಪಣೆಗೊಳಿಸಿ ಬಸವ ಭಕ್ತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
