ಮಳವಳ್ಳಿ:
ಸಮಾಜದಲ್ಲಿ ವಿವಿಧ ಜಾತಿ-ಧರ್ಮಗಳಿದ್ದು, ಇದು ಅಸಮಾನತೆಯ ಹುಟ್ಟಿಗೆ ಕಾರಣವಾಗಿದೆ. ಈ ಅಸಮಾನತೆ ನಿವಾರಣೆಯಾಗದೇ ಸಮಾಜದಲ್ಲಿ ಶಾಂತಿ ಸ್ಥಾಪನೆ ಅಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಆಯೋಜಿಸಲಾಗಿದ್ದ ಶ್ರೀ ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪಕ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಬಸವಾದಿ ಶರಣರು ಮನುಷ್ಯ ಸಮಾಜ, ಸಮಸಮಾಜ ನಿರ್ಮಾಣವಾಗಬೇಕೆಂದು ಅವಿರತ ಶ್ರಮಿಸಿದರು. ಆದಾಗ್ಯೂ ಸಮಾಜದಲ್ಲಿ ಜಾತಿವ್ಯವಸ್ಥೆ ಸಂಪೂರ್ಣ ನಿರ್ಮೂಲನೆಯಾಗಿಲ್ಲ. ಕವಿ ಕುವೆಂಪು ಹೇಳಿದಂತೆ ಸರ್ವಜನಾಂಗದ ಶಾಂತಿಯ ತೋಟ ಸ್ಥಾಪನೆಯಾಗಲು ಮಾನವೀಯ ಸಮಾಜ ನಿರ್ಮಾಣವಾಗಬೇಕು.
ಯಾವುದೇ ಧರ್ಮವಾಗಲಿ ಪ್ರೀತಿಯನ್ನು ಬೋಧಿಸುತ್ತದೆಯೇ ಹೊರತು ದ್ವೇಷವನ್ನು ಬೋಧಿಸುವುದಿಲ್ಲ. ಇದು ನಮ್ಮ ಸಂಸ್ಕೃತಿ. ಮನುಷ್ಯ – ಮನುಷ್ಯನನ್ನು ಪ್ರೀತಿಸುವ ಮನುಷ್ಯ ಸಮಾಜ ನಿರ್ಮಾಣವಾಗಬೇಕು. ದ್ವೇಷಾಸೂಯೆ ಬಿತ್ತುವ ಅನೇಕ ಶಕ್ತಿಗಳು ಸಮಾಜದಲ್ಲಿ ಇವೆ. ಅಂತಹ ಶಕ್ತಿಗಳ ವಿರುದ್ಧ ಹೋರಾಡುವುದು ನಮ್ಮೆಲ್ಲರ ಕರ್ತವ್ಯ.
ಹುಟ್ಟು ಸಾವಿನ ನಡುವಿನ ಜೀವನವನ್ನು ನಾವು ಸಾರ್ಥಕಗೊಳಿಸಿಕೊಳ್ಳಬೇಕು. ವಿದ್ಯಾವಂತರಿಗೆ ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯಿರಬೇಕು. ಸಮಾಜದಲ್ಲಿ ಸಮಾಜಮುಖಿಯಾಗಿ ಬಾಳುವುದು ಮುಖ್ಯ. ಮನುಷ್ಯ ಮನುಷ್ಯರ ನಡುವಿನ ದ್ವೇಷ ಅಮಾನವೀಯವಾದುದು.
ಮನುಷ್ಯನ ಕಷ್ಟ ಸುಖಗಳಿಗೆ ಸ್ಪಂದಿಸುವುದೇ ದಾಸೋಹ. ದೇ. ಜವರೇಗೌಡ ಅವರು ಕಾಯಕ ಎಂದರೆ ಉತ್ಪಾದನೆ, ದಾಸೋಹ ಅಂದರೆ ವಿತರಣೆ ಎಂದು ಹೇಳಿದ್ದರು. ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಭಾಗವಹಿಸಬೇಕು. ಒಬ್ಬರು ಉತ್ಪಾದಿಸಿದ್ದನ್ನು ಮತ್ತೊಬ್ಬರು ಅನುಭವಿಸುವಂತಾಗಬಾರದು. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯವಾಗುತ್ತದೆ.

ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಯಂತೋತ್ಸವಗಳು ಹಲವು ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ನಡೆದುಕೊಂಡು ಬರುತ್ತಿದ್ದು, ಮುಂದಿನ ವರ್ಷ ಗುಂಡ್ಲುಪೇಟೆಯಲ್ಲಿ ನಡೆಯಲಿರುವುದು ಸಂತೋಷದ ವಿಚಾರ.
ಈ ಕಾರ್ಯಕ್ರಮ ಆಯೋಜನೆಯಲ್ಲಿ ಸಹಕರಿಸಿದ ಶಾಸಕರಾದ ನರೇಂದ್ರಸ್ವಾಮಿಯವರಿಗೆ ಧನ್ಯವಾದಗಳು. ಈ ದೇಶದಲ್ಲಿ ಹಲವಾರು ಸಾಧುಸಂತರು, ಸೂಫಿ ಸಂತರು ಸಮಾಜದ ಬದಲಾವಣೆಗೆ ಶ್ರಮಿಸಿದ್ದು, ಈ ಪ್ರಯತ್ನದಲ್ಲಿ ಶ್ರೀಗಳು ಮೇಲ್ಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಹೇಳಿದರು.

