ಬೆಂಗಳೂರು
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಬೆಂಗಳೂರಿನ ತರಳಬಾಳು ಭವನದಲ್ಲಿ ಆಯೋಜಿಸಲಾದ ಡಾ. ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರವ ನಮನ ಸಲ್ಲಿಸಲಾಯಿತು.
‘ಬೆಂಗಳೂರಿನಲ್ಲಿ 1,000 ವಿದ್ಯಾರ್ಥಿನಿಯರಿಗೆ ವಸತಿ ಕಲ್ಪಿಸುವ ಸಾಮರ್ಥ್ಯದ ವಿದ್ಯಾರ್ಥಿನಿಲಯ ನಿರ್ಮಿಸಬೇಕು ಎಂಬುದು ಶಾಮನೂರು ಶಿವಶಂಕರಪ್ಪ ಅವರ ಕನಸಾಗಿತ್ತು. ಅದನ್ನು ನನಸು ಮಾಡುತ್ತೇವೆ’ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಬಿ.ಖಂಡ್ರೆ ಹೇಳಿದರು.
‘ವಿದ್ಯಾರ್ಥಿನಿಲಯ ಸ್ಥಾಪನೆಗೆ ಈಗಾಗಲೇ ಎರಡು ಎಕರೆ ಜಮೀನು ಖರೀದಿಸಲಾಗಿದ್ದು, ಕಟ್ಟಡದ ರೂಪುರೇಷೆ ಸಿದ್ಧವಾಗಿದೆ’ ಎಂದು ಮಾಹಿತಿ ನೀಡಿದರು.
ಡಾ. ಶಾಮನೂರು ಶಿವಶಂಕರಪ್ಪ ಅವರು ಮೂರು ಅವಧಿಗೆ ಸತತ ಹದಿಮೂರೂವರೆ ವರ್ಷಗಳ ಕಾಲ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ, ಜನರಿಂದ–ಜನರಿಗಾಗಿ–ಜನರಿಗೋಸ್ಕರ ಬದುಕಿದ ಅಪರೂಪದ ನಾಯಕರು. ಅವರ ಜೀವನೋತ್ಸಾಹ, ಸಮಾಜದ ಮೇಲಿನ ಬದ್ಧತೆ ಮತ್ತು ನಿರ್ಭಯ ನಿಲುವುಗಳು ನಮಗೆಲ್ಲರಿಗೂ ಮಾದರಿ.
ಶಾಮನೂರು ಅವರು ಆಡಳಿತ ಪಕ್ಷದಲ್ಲೇ ಇರಲಿ, ವಿರೋಧ ಪಕ್ಷದಲ್ಲೇ ಇರಲಿ, ಯಾರಿಗೂ ಅಂಜದೆ ನಿಷ್ಠುರವಾಗಿ ಮಾತನಾಡುತ್ತಿದ್ದರು. ಸಮಾಜದ ಹಿತ ಕಾಯುವುದಷ್ಟೇ ಅವರಿಗೆ ಮುಖ್ಯವಾಗಿತ್ತು’ ಎಂದು ಹೇಳಿದರು.

ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅವರು, ‘ಶಾಮನೂರು ಶಿವಶಂಕರಪ್ಪ ಅವರು ಉದ್ಯಮಿಯಾಗಿ, ಶಾಸಕರಾಗಿ, ಸಚಿವರಾಗಿ ಈ ಸಮಾಜಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಶಿಕ್ಷಣ, ಉದ್ಯಮ, ರಾಜಕೀಯ ಕ್ಷೇತ್ರ ಒಳಗೊಂಡು ದಾವಣಗೆರೆ ಜಿಲ್ಲೆಯನ್ನು ವಿಶ್ವದ ಭೂಪಟದಲ್ಲಿ ಕಾಣುವಂತೆ ಮಾಡಿದರು’ ಎಂದರು.
ಸುತ್ತೂರು ಸಂಸ್ಥಾನದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ‘ಕೈಗಾರಿಕಾ ನಗರವಾಗಿದ್ದ ದಾವಣಗೆರೆಯನ್ನು ಶಿಕ್ಷಣ ಕಾಶಿಯಾಗಿ ಪರಿವರ್ತಿಸಿದ ಕೀರ್ತಿ ಶಾಮನೂರು ಶಿವಶಂಕರಪ್ಪ ಅವರಿಗೆ ಸಲ್ಲುತ್ತದೆ’ ಎಂದರು.
ಸಂಸದ ಬಸವರಾಜ ಬೊಮ್ಮಾಯಿ, ‘ಭವಿಷ್ಯದಲ್ಲಿ ವೀರಶೈವ–ಲಿಂಗಾಯತ ಸಮಾಜದ ಸಾಮಾಜಿಕ ರಾಜಕೀಯ ಸವಾಲುಗಳನ್ನು ನಿಭಾಯಿಸಲು, ಮಹಾಸಭೆ ಅಡಿಯಲ್ಲಿ ಎಲ್ಲರೂ ಸೇರಿ ಕೆಲಸ ಮಾಡಿದಾಗ ಮಾತ್ರ ಶಾಮನೂರು ಶಿವಶಂಕರಪ್ಪ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸಿದಂತಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ವಿವಿಧ ಮಠಾಧೀಶರು, ಗಣ್ಯರು, ಜನಪ್ರತಿನಿಧಿಗಳು ಉಪಸ್ಥಿತರಿದ್ದು, ಡಾ. ಶಾಮನೂರು ಶಿವಶಂಕರಪ್ಪ ಅವರ ಸಮಾಜಮುಖಿ ಜೀವನವನ್ನು ಸ್ಮರಿಸಿದರು.
ಸಚಿವ ಶರಣ ಪ್ರಕಾಶ ಪಾಟೀಲ, ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ ಸೇರಿದಂತೆ ವಿವಿಧ ಮಠಾಧೀಶರು, ಗಣ್ಯರು, ಜನಪ್ರತಿನಿಧಿಗಳು ಉಪಸ್ಥಿತರಿದ್ದು, ಡಾ. ಶಾಮನೂರು ಶಿವಶಂಕರಪ್ಪ ಅವರ ಸಮಾಜಮುಖಿ ಜೀವನವನ್ನು ಸ್ಮರಿಸಿದರು.
