ಮಹಿಳೆಯರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ
ಭಾಲ್ಕಿ:
ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಸಮುಚ್ಛಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ರಕ್ಷಾಬಂಧನವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು.
ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಮತ್ತು ಪೀಠಾಧಿಪತಿ ಗುರುಬಸವ ಪಟ್ಟದ್ದೇವರ ಸಾನಿಧ್ಯದಲ್ಲಿ ನಡೆದ ರಕ್ಷಾ ಬಂಧನ ಕಾರ್ಯಕ್ರಮಕ್ಕೆ ಸಾವಿರಾರೂ ವಿದ್ಯಾರ್ಥಿಗಳು ಸಾಕ್ಷಿಯಾದರು.
ವಿದ್ಯಾರ್ಥಿನಿಯರು ಸಾಲಿನಲ್ಲಿ ನಿಂತು ವಿದ್ಯಾರ್ಥಿಗಳ ಮುಂಗೈಗೆ ರಾಖಿ ಕಟ್ಟಿ, ಸಿಹಿ ತಿನ್ನಿಸಿ ಶುಭ ಕೋರಿದರು. ವಿದ್ಯಾರ್ಥಿಗಳು ಕೂಡ ವಿದ್ಯಾರ್ಥಿನಿಯರಿಗೆ ಪಾದಗಳಿಗೆ ನಮಸ್ಕರಿಸಿ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಡಾ. ಬಸವಲಿಂಗ ಪಟ್ಟದ್ದೇವರು ಮಾತನಾಡಿ, ರಕ್ಷಾ ಬಂಧನವು ಕೇವಲ ಅಣ್ಣ-ತಂಗಿಯರ ಹಬ್ಬ ಮಾತ್ರವಲ್ಲ, ಅದು ಇಡೀ ಸಮಾಜಕ್ಕೆ ಸುರಕ್ಷತೆ, ಸದಾಚಾರ ಮತ್ತು ಆಧ್ಯಾತ್ಮಿಕ ರಕ್ಷಣೆಯನ್ನು ನೀಡುವ ಒಂದು ಪವಿತ್ರ ಸಂಕಲ್ಪವಾಗಿದೆ ಎಂದರು.
ಜಾತಿ, ಮತ ಭೇದವಿಲ್ಲದೆ ಇಡೀ ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹೋದರತ್ವವನ್ನು ಮೂಡಿಸುವುದೇ ಇದರ ಮುಖ್ಯ ಉದ್ಧೇಶ.
ಸಮಾಜದಲ್ಲಿ ಪರಸ್ಪರ ಗೌರವ, ಪ್ರೀತಿ ಮತ್ತು ಸೋದರತ್ವವನ್ನು ಬೆಳೆಸುವ ಪವಿತ್ರ ಆಚರಣೆಯಾಗಿದೆ. ಪ್ರತಿಯೊಬ್ಬ ಮಹಿಳೆಯನ್ನು ಗೌರವದಿಂದ ಕಾಣುವುದು ಮತ್ತು ಅವರಿಗೆ ರಕ್ಷಣೆ ನೀಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂಬುದನ್ನು ಈ ಹಬ್ಬ ನಮಗೆ ನೆನಪಿಸುತ್ತದೆ.
ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಸಾಮಾಜಿಕ ಒಗ್ಗಟ್ಟು ಮತ್ತು ಪ್ರಕೃತಿಯ ಮೇಲಿನ ಪ್ರೀತಿಯನ್ನು ಮೂಡಿಸಲು ರಕ್ಷಾ ಬಂಧನವು ಒಂದು ಅತ್ಯುತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.
ಸಂಸ್ಥೆಯ ಮೇಲ್ವಿಚಾರಕಿ ಜಯಕ್ಕ ಗಾಂವಕರ ಪ್ರಾರ್ಥನೆ ಗೀತೆ ನಡೆಸಿಕೊಟ್ಟರು.

ವಿದ್ಯಾರ್ಥಿಗಳು ಬಸವಗುರುವಿನ ಪೂಜೆ ನೆರವೇರಿಸಿದರು. ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದರು.
ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/JtGWW38lyFrDf4kKL0aXGH
