ಕೂಡಲಸಂಗಮ:
ರಾಷ್ಟ್ರೀಯ ಬಸವದಳ, ಲಿಂಗಾಯತ, ಬಸವಪರ ಸಂಘಟನೆಗಳ ನೇತೃತ್ವದಲ್ಲಿ ಜೂನ 28 ರಂದು ಬೀದರ ಜಿಲ್ಲೆ ಬಸವಕಲ್ಯಾಣದಲ್ಲಿ ಕನ್ನೇರಿ ಮಠದ ಕಾಡಸಿದ್ದೇಶ್ವರ ಶ್ರೀಗಳ ನಡೆ ಖಂಡಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಬಸವ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೂಡಲಸಂಗಮ ಬಸವಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಸವಾದಿ ಶರಣರ, ಬಸವ ಪರಪಂರೆಯ ಪೂಜ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವ, ಬಸವ ತತ್ವಾನುಯಾಯಿಗಳ ಭಾವನೆಗೆ ದಕ್ಕೆ ಉಂಟುಮಾಡಿ ಸಮಾಜದಲ್ಲಿ ಅಶಾಂತಿ, ಗೊಂದಲ ಉಂಟು ಮಾಡುತ್ತಿರುವ ಕನ್ನೇರಿ ಕಾಡಸಿದ್ದೇಶ್ವರ ಶ್ರೀಗಳ ನಡೆ ಖಂಡಿನೀಯ.
ಬಸವಾದಿ ಶರಣರ ತತ್ವ ಸಿದ್ದಾಂತಗಳನ್ನು ಜನರಿಗೆ ತಪ್ಪಾಗಿ ಬಿಂಬಿಸುವ ಉದ್ದೇಶದಿಂದ ಬಸವಾದಿ ಶರಣರ ಹಿಂದೂ ಸಮಾವೇಶವನ್ನು ಕನ್ನೇರಿ ಶ್ರೀಗಳು ಹಮ್ಮಿಕೊಂಡು ಗೊಂದಲ ಉಂಟುಮಾಡುತ್ತಿದ್ದಾರೆ. ಶ್ರೀಗಳ ನಡೆಯನ್ನು ಖಂಡಿಸಿ ತಕ್ಕ ಉತ್ತರ ಕೊಡಲು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾತಾಜಿ ತಿಳಿಸಿದ್ದಾರೆ.
