ಲಿಂಗಣ್ಣ ಸತ್ಯಂಪೇಟೆ ಸಂಸ್ಮರಣೆ
ಕಲಬುರಗಿ:
ಶರಣ ಸಾಹಿತಿ ಲಿಂಗೈಕ್ಯ ಲಿಂಗಣ್ಣ ಸತ್ಯಂಪೇಟೆ ಅವರ 14ನೇ ಸ್ಮರಣೋತ್ಸವ ನಿಮಿತ್ತ ಬಸವ ಮಾರ್ಗ ಪ್ರಶಸ್ತಿ ಪ್ರಧಾನ ಹಾಗೂ ‘ಅಪ್ಪನ ಒಡನಾಟ’ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಜುಲೈ 25ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶರಣ ಮಾರ್ಗ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಶಿವರಂಜನ ಸತ್ಯಂಪೇಟೆ ತಿಳಿಸಿದ್ದಾರೆ.
ಮುದಗಲ್ ಕಲ್ಯಾಣಾಶ್ರಮದ ಪೂಜ್ಯ ಮಹಾಂತಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಬಸವ ಸಮಿತಿ ಅಧ್ಯಕ್ಷೆ ಡಾ. ವಿಲಾಸವತಿ ಖೂಬಾ ಉದ್ಘಾಟಿಸಲಿದ್ದಾರೆ. ವಕೀಲ ಸಂತೋಷ ಸತ್ಯಂಪೇಟೆ ಅವರು ರಚಿಸಿರುವ ‘ಅಪ್ಪನ ಒಡನಾಟ’ ಕೃತಿಯನ್ನು ಶಾಸಕ ಬಿ.ಆರ್. ಪಾಟೀಲ ಬಿಡುಗಡೆ ಮಾಡಲಿದ್ದಾರೆ. ಗುಲ್ಬರ್ಗ ವಿವಿ ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕ ಡಾ. ಅಶೋಕ ದೊಡ್ಡಮನಿ ಕೃತಿ ಕುರಿತು ಮಾತನಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆಯಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸ್ ಅಧಿಕಾರಿ ಡಾ. ಬಿ.ಎಸ್. ಸುಧಾಕರ ಅವರಿಗೆ ಮಾಜಿ ಸಚಿವ ಎಸ್.ಕೆ. ಕಾಂತಾ ಅವರು ಬಸವ ಮಾರ್ಗ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಪ್ರಶಸ್ತಿಯು 5,000 ರೂ. ನಗದು ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ ಎಂದು ಅವರು ಹೇಳಿದ್ದಾರೆ.
ಮುಖ್ಯ ಅತಿಥಿಗಳಾಗಿ ಸರ್ವಜ್ಞ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಚನ್ನಾರಡ್ಡಿ ಪಾಟೀಲ, ಸಾಹಿತ್ಯ ಅಕಾಡೆಮಿ ಸದಸ್ಯ ಸಿದ್ಧರಾಮ ಹೊನ್ಕಲ್, ಕರ್ನಾಟಕ ರಾಜ್ಯ ವೈಜ್ಞಾನಿಕ ಹಾಗೂ ಸಂಶೋಧನ ಸಮಿತಿ ಜಿಲ್ಲಾಧ್ಯಕ್ಷ ರವೀಂದ್ರ ಶಾಬಾದಿ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಆಗಮಿಸಲಿದ್ದಾರೆ. ಬಸವ ಮಾರ್ಗ ಪ್ರತಿಷ್ಠಾನದ ಅಧ್ಯಕ್ಷ ವಿಶ್ವಾರಾಧ್ಯ ಸತ್ಯಂಪೇಟೆ ಅಧ್ಯಕ್ಷತೆ ವಹಿಸಲಿದ್ದಾರೆ.
ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/LcykjUHphtT2VDkfrKC3PM
