ಕಲಬುರಗಿ
ಚಿತ್ತಾಪುರ ಮತಕ್ಷೇತ್ರದ ಶಹಾಬಾದ ತಾಲ್ಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅವರ ಮೂರ್ತಿ ವಿರೂಪ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಅಣ್ಣೂರು
ಶ್ರೀನಿವಾಸಲು ಹೇಳಿದ್ದಾರೆ.
ಜೀವಣಗಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ವಿಶ್ವಾರಾಧ್ಯ ಪಾಟೀಲ, ಮುತ್ತಗಾ ಗ್ರಾಮದ ಸಾಬಣ್ಣ ಮಲ್ಲಪ್ಪ ಪಟ್ಟೇದಾರ ಹಾಗೂ ಮುತ್ತಗಾ ಗ್ರಾಮದ ಶಿವರಾಜ್ಯ ಶಂಕರ ನಾಟೀಕಾರ ಬಂಧಿತ ಆರೋಪಿಗಳಾಗಿದ್ದಾರೆ ಎಂದು ತಿಳಿಸಿದರು.

ಅ.10 ರಂದು ಬೆಳಗಿನ ಜಾವ ಶಹಾಬಾದ ತಾಲ್ಲೂಕಿನ ಮುತ್ತಗಾ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ವಿರೂಪಗೊಳಿಸಿ, ಆರೋಪಿಗಳು ಪರಾಯಿಯಾಗಿದ್ದರು. ಈ ಕುರಿತು ಶಹಾಬಾದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಅಪರ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣನವರ, ಡಿವೈಎಸ್ಪಿ ಶಂಕರಗೌಡ ಪಾಟೀಲ, ಪಿಐ ನಟರಾಜ ಲಾಡೆ, ಸಿಪಿಐ ಚಂದ್ರಶೇಖರ ತಿಗಡಿ, ಜಗದೇವಪ್ಪ ಪಾಳಾ ಅವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು. ತೀವ್ರ ತನಿಖೆ ನಡೆಸಿದ ಬಳಿಕ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಆರೋಪಿಗಳನ್ನು
ಪತ್ತೆ ಹಚ್ಚಲಾಗಿದೆ. ಶ್ವಾನ ದಳ ಸಹಾಯ ಪಡೆದುಕೊಂಡು ಆರೋಪಿಗಳನ್ನು ಖಚಿತಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಬಂಧಿತ ಆರೋಪಿಗಳಲ್ಲಿ ಇಬ್ಬರು ಕೋಲಿ ಸಮುದಾಯಕ್ಕೆ ಸೇರಿದ್ದವರಾಗಿದ್ದು, ಇವರು ಮೂರ್ತಿ ವಿರೂಪ ಮಾಡಿದರೆ ಮುಂದಿನ ದಿನಗಳಲ್ಲಿ ಅದರ ಅಭಿವೃದ್ಧಿ ಆಗುತ್ತದೆ ಎಂದು ಕಾರಣ ಇಟ್ಟುಕೊಂಡು ಮೂರ್ತಿಗೆ ಅಪಮಾನ ಮಾಡಿದ್ದಾರೆ ಎಂದು ಎಸ್ಪಿ ಅಡ್ಡೂರ್ ಶ್ರೀನಿವಾಸಲು ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಹೇಶ ಮೇಘಣ್ಣನವರ, ಡಿವೈಎಸ್ಪಿ ಶಂಕರಗೌಡ ಪಾಟೀಲ, ಪಿಐ ನಟರಾಜ ಲಾಡೆ, ಸಿಪಿಐ ಚಂದ್ರಶೇಖರ ತಿಗಡಿ, ಜಗದೇವಪ್ಪ ಪಾಳಾ ಮತ್ತಿತ್ತರರು ಇದ್ದರು.
