ಕಲ್ಯಾಣದ ಶರಣರ ಹತ್ಯೆ ನಡೆಸಿದವರು ಯಾರು, ಯತ್ನಾಳ್ ಅವರೇ: ಪ್ರಿಯಾಂಕ್ ಖರ್ಗೆ

ಬಸವ ಮೀಡಿಯಾ
ಬಸವ ಮೀಡಿಯಾ

ಬಸವಣ್ಣನವರನ್ನು ಪಲಾಯನವಾದಿ ಎಂಬರ್ಥದಲ್ಲಿ ಮಾತನಾಡಿರುವ ಯತ್ನಾಳ್ ಅವರನ್ನು ಪ್ರಜ್ಞಾವಂತ ಬಸವಾನುಯಾಯಿಗಳು ಗಟ್ಟಿ ಧ್ವನಿಯಲ್ಲಿ ಖಂಡಿಸಬೇಕಿದೆ.

ಕಲಬುರ್ಗಿ

(ವಿಶ್ವಗುರು ಬಸವಣ್ಣನವರ ಮೇಲೆ ವಿವಾದಾಸ್ಪದ ಹೇಳಿಕೆ ನೀಡಿರುವ ಬಸವನಗೌಡ ಪಾಟೀಲ ಯತ್ನಾಳ್ ಅವರನ್ನು ಖಂಡಿಸಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ.)

ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪೆಸಗಿದ್ದಾರೆ.

ಕಾಂಗ್ರೆಸ್ ನಾಯಕರು, ಅಲ್ಪಸಂಖ್ಯಾತರ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿದ್ದ ಬಿಜೆಪಿಯವರ ನಾಲಿಗೆಗಳು ಈಗ ಸಮಾಜ ಸುಧಾರಣೆಗೆ ಜೀವ ಸವೆಸಿದ ಮಹನೀಯರ ಬುಡಕ್ಕೂ ಚಾಚುವಷ್ಟು ಉದ್ದವಾಗಿವೆ.

“ಬಸವಣ್ಣನವರ ಹಾಗೆ ಹೊಳೆ ಹಾರಬೇಕು“ ಎನ್ನುವ ಮೂಲಕ ಬಸವಣ್ಣನವರನ್ನು ಪಲಾಯನವಾದಿ ಎಂಬರ್ಥದಲ್ಲಿ ಮಾತನಾಡಿದ ಯತ್ನಾಳ್ ಅವರನ್ನು ಈ ನಾಡಿನ ಪ್ರಜ್ಞಾವಂತ ಬಸವಾನುಯಾಯಿಗಳು ಗಟ್ಟಿ ಧ್ವನಿಯಲ್ಲಿ ಖಂಡಿಸಬೇಕಿದೆ.

”ತನ್ನ ಬಣ್ಣಿಸಬೇಡ, ಇದಿರು ಹಳಿಯಬೇಡ“ ಎಂದಿದ್ದ ಬಸವಣ್ಣನವರ ಹೆಸರನ್ನು ಯತ್ನಾಳ್ ಅವರು ತಮ್ಮ ದ್ವೇಷ ಭಾಷಣಕ್ಕೆ ಬಳಸಿದ್ದು ಮತ್ತೊಂದು ಘೋರ ಅಪರಾಧ.

ಬಸವಣ್ಣನವರು ಹೊಳೆ ಹಾರಿಲ್ಲ, ಈ ಸಮಾಜಕ್ಕೆ ಜ್ಞಾನದ ಹೊಳೆ ಹರಿಸಿದ್ದಾರೆ, ಯತ್ನಾಳ್ ಅವರೇ, ನಿಮ್ಮ ಪ್ರಕಾರ ಬಸವಣ್ಣನವರು ಹೊಳೆ ಹಾರಿದ್ದಾರೆ ಎನ್ನುವುದಾದರೆ ಅವರನ್ನು ಹೊಳೆಗೆ ಹಾರುವಂತೆ ಮಾಡಿದವರು ಯಾರು?

ಇಂದು ಯತ್ನಾಳ್ ಅವರು ಪ್ರತಿಪಾದಿಸುತ್ತಿರುವ ಸಿದ್ಧಾಂತವೇ ಅಂದು ಬಸವಾದಿ ಶರಣರನ್ನು ಹಿಂಸಿಸಿದ್ದಲ್ಲವೇ?

ಕಲ್ಯಾಣದ ಶರಣರ ಹತ್ಯೆ ನಡೆಸಿದವರು ಯಾರು?
ಶರಣರು “ಮರಣವೇ ಮಹಾನವಮಿ“ ಎಂದಿದ್ದೇಕೆ?
ವಚನ ಬಂಡಾರಕ್ಕೆ ಬೆಂಕಿ ಇಟ್ಟವರು ಯಾರು?
ಅನುಭವ ಮಂಟಪಕ್ಕೆ ದಾಳಿ ಮಾಡಿದವರು ಯಾರು?
ಮಡಿವಾಳ ಮಾಚಿದೇವರು ಕತ್ತಿ ಹಿಡಿದಿದ್ದೇಕೆ?
ಯಾರಿಂದ ರಕ್ಷಣೆ ಪಡೆಯಲು?
ಬಿಜೆಪಿಯವರಿಗೆ ಈ ವಿಚಾರಗಳ ಬಗ್ಗೆ ಚರ್ಚಿಸುವ ಶಕ್ತಿ ಇದೆಯೇ?

ಬಸವಣ್ಣನವರ ಅನುಭವ ಮಂಟಪದ ಪರಿಕಲ್ಪನೆಯಲ್ಲೇ ಇಂದು ನಾವು ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡಿದ್ದೇವೆ.
ಅವರ ತತ್ವಗಳ ಪ್ರೇರಣೆಯಲ್ಲೇ ನಮ್ಮ ಸಂವಿಧಾನವಿದೆ. ಧಮನಿತರಿಗೆ ಆತ್ಮಶಕ್ತಿ ನೀಡಿದ, ಶೋಷಿತರಿಗೆ ಘನತೆಯ ಬದುಕು ತಂದುಕೊಟ್ಟ, ಕಲ್ಯಾಣ ಕ್ರಾಂತಿಯ ಮೂಲಕ ಮೌಢ್ಯದಲ್ಲಿ ಜಡಗಟ್ಟಿದ್ದ ಸಮಾಜಕ್ಕೆ ಹೊಸ ಮಾರ್ಗ ತೋರಿದ ಬಸವಣ್ಣನವರು ಕೇವಲ “ಹೊಳೆ ಹಾರಿದವರಾಗಿ” ಕಂಡಿದ್ದು ಬಿಜೆಪಿಗರ ಅಜ್ಞಾನದ ದ್ಯೋತಕವಾಗಿದೆ. ಬಸವಣ್ಣರನ್ನು ಅನುಸರಿಸುವ ಈ ನಾಡಿನ ಜನ ಬಿಜೆಪಿಗರ ಈ ನಡೆಯನ್ನು ಸಹಿಸಲು ಸಾಧ್ಯವಿಲ್ಲ.

ಕೆಲ ದಿನಗಳ ಹಿಂದೆ ನಾಡಿನ ಜನ ವೇದಿಕೆಯಿಂದ ಕೆಳಗಿಳಿಸಿ ಓಡಿಸಿದ್ದರೂ ಬುದ್ದಿ ಕಲಿಯದ ಯತ್ನಾಳ್ ಅವರ ನಾಲಿಗೆಗೆ ಕಡಿವಾಣ ಹಾಕುವ ಶಕ್ತಿ ಕರ್ನಾಟಕದ ಜನರಿಗಿದೆ.

ಬಸವ ಮೀಡಿಯಾ ವರದಿ ಮತ್ತು ವಿಡಿಯೋ ಹಂಚಿಕೊಂಡ ಖರ್ಗೆ

ಯತ್ನಾಳರ ಭಾಷಣ ಖಂಡಿಸಿ ಪ್ರಿಯಾಂಕ್ ಖರ್ಗೆ ಶುಕ್ರವಾರ ತಮ್ಮ ಹೇಳಿಕೆಯನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡರು. ತಮ್ಮ ನಿಲುವಿಗೆ ಪೂರಕವಾಗಿ ಬಸವ ಮೀಡಿಯಾ ವರದಿ, ವಿಡಿಯೊ ಮತ್ತು ಪ್ರಜಾವಾಣಿಯ ಒಂದು ವರದಿ ಹಂಚಿಕೊಂಡರು.

Share This Article
3 Comments
  • ಬಸವ ತತ್ವದ ಅರಿವು ಇಲ್ಲದ, ವಚನ ಸಾಹಿತ್ಯದ ಗಂಧ ಗಾಳಿಗೊತ್ತಿಲ್ಲದ ನೀತಿಗೆಟ್ಟ ರಾಜಕಾರಿಣಿ ಯತ್ನಾಳ ಹೋದ ಕಡೆಯಲ್ಲಾ ಲಿಂಗಾಯತರು ಕ್ಷಮೆ ಕೇಳುವವರೆಗೆ ಪ್ರತಿಭಟನೆ ಮಾಡಬೇಕು

  • ಖರ್ಗೆಯವರು ತುಂಬಾ ಅರ್ಥಗರ್ಭಿತವಾಗಿ ಪ್ರತಿಕ್ರಿಯಿಸಿದ್ದಾರೆ. ಇಂತಹ ಪ್ರತಿಕ್ರಿಯೆಗಳನ್ನು ಅರ್ಥ ಮಾಡಿಕೊಳ್ಳುವಷ್ಟು ಪ್ರಬುದ್ಧತೆ ಯತ್ನಾಳ್ ಅವರಿಗಿದೆ ಅಂತ ಅನಿಸುವುದಿಲ್ಲ.

Leave a Reply

Your email address will not be published. Required fields are marked *