ಜಗಳೂರು
ಸೆಪ್ಟೆಂಬರ್ ತಿಂಗಳಲ್ಲಿ ಮಠಾಧಿಪತಿಗಳ ಒಕ್ಕೂಟದ ನೇತೃತ್ವದಲ್ಲಿ ಬಸವಸಂಸ್ಕೃತಿ ಅಭಿಯಾನ ರಾಜ್ಯವ್ಯಾಪಿ ಆಂದೋಲನದ ರೀತಿಯಲ್ಲಿ ನಡೆಸಲಾಗುವುದು ಎಂದು ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಅರಿಶಿನಗುಂಡಿ ಗ್ರಾಮದಲ್ಲಿ ಸೋಮವಾರ ನಡೆದ ಸರ್ವಶರಣರ ಸಮ್ಮೇಳನದ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.
‘ಸೆಪ್ಟೆಂಬರ್ 1ರಿಂದ 30ರವರೆಗೆ ಕರ್ನಾಟಕ ರಾಜ್ಯದಾದ್ಯಂತ ಬಸವ ತತ್ವ ಮತ್ತು ಚಿಂತನೆಗಳ ಪ್ರಸಾರದ ಕುರಿತು ವಿನೂತನ ಆಂದೋಲನ ನಡೆಸಲಾಗುವುದು. 2019ರಲ್ಲಿ ಮತ್ತೆ ಕಲ್ಯಾಣ ಕಾರ್ಯಕ್ರಮದಡಿ ಬಸವಣ್ಣನವರ ಆಶಯದಂತೆ ವೈಚಾರಿಕತೆ ಪ್ರಚಾರ, ಜಾತ್ಯತೀತ ಸಮಸಮಾಜದ ನಿರ್ಮಾಣಕ್ಕೆ ಪೂರಕವಾಗುವ ವಿನೂತನ ಕಾರ್ಯಕ್ರಮಗಳೊಂದಿಗೆ ಸಂಚಾರ ನಡೆಸಲಾಗಿತ್ತು’ ಎಂದು ಹೇಳಿದರು.
‘ಸಿರಿಗೆರೆ ಶ್ರೀಗಳ ಆಶಯದಂತೆ ತಾಲ್ಲೂಕಿನ ಕೆರೆಗಳಿಗೆ ನೀರು ಹರಿದು ಬಂದಿದ್ದು, ರೈತರು ಲಾಭದಾಯಕ ಕೃಷಿ ಕೈಗೊಳ್ಳಬೇಕು’ ಎಂದು ಮಾಜಿ ಶಾಸಕ ಎಚ್.ಪಿ. ರಾಜೇಶ್ ಸಲಹೆ ನೀಡಿದರು.
ಫಾದರ್ ಸಿಲ್ವೆಸ್ಟರ್ ಫೆರೆರಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೆ.ಪಿ. ಪಾಲಯ್ಯ, ಎಸ್.ಕೆ. ಮಂಜುನಾಥ್, ನಾರಪ್ಪ, ಪತ್ರಕರ್ತ ಸೋಮನಗೌಡ, ಲೋಕೇಶ್, ಬಿ.ಟಿ. ಬಸವರಾಜಪ್ಪ, ಲಿಂಗಣ್ಣನಹಳ್ಳಿ ಕೃಷ್ಣಮೂರ್ತಿ, ಪಲ್ಲಾಗಟ್ಟೆ ಶೇಖರಪ್ಪ ಇದ್ದರು.