ವಿಜಯಪುರ
ವಚನ ಪಿತಾಮಹ ಡಾ.ಫ.ಗು. ಹಳಕಟ್ಟಿ ಪ್ರಕಟಿಸುತ್ತಿದ್ದ ಶಿವಾನುಭವ ಪತ್ರಿಕೆ ಮರು ಆರಂಭ ಮಾಡುವ ಯೋಜನೆ ರೂಪಿಸಲಾಗಿದ್ದು, ಈ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬಿಎಲ್ಡಿಇ ಸಂಸ್ಥೆ ಅಧ್ಯಕ್ಷ ಡಾ.ಎಂ.ಬಿ. ಪಾಟೀಲ ಹೇಳಿದ್ದಾರೆ.
ನಗರದ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ಗ್ರಂಥಾಲಯ ಸಭಾಂಗಣದಲ್ಲಿ ಚಿಂತನ-ಸಾಂಸ್ಕೃತಿಕ ಬಳಗದ ವತಿಯಿಂದ ಬಿಎಲ್ಡಿಇ ಸಂಸ್ಥೆ ಕಟ್ಟಿ ಬೆಳೆಸಿದ ಡಾ.ಫ.ಗು.ಹಳಕಟ್ಟಿ, ಬಂಥನಾಳ ಸಂಗನಬಸವ ಶಿವಯೋಗಿಗಳು, ಬಿ.ಎಂ.ಪಾಟೀಲ ಹಾಗೂ ಬಂಗಾರಮ್ಮ ಸಜ್ಜನ ಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಾ.ಹಳಕಟ್ಟಿ ಅವರು ಅನೇಕ ಕಷ್ಟಗಳನ್ನು ಎದುರಿಸಿ ವಚನ ಸಾಹಿತ್ಯ ಬೆಳಕಿಗೆ ತಂದರು. ಜೊತೆಗೆ ಕೆರೆಗಳ ನಿರ್ಮಾಣ ಸೇರಿ ವಿವಿಧ ಸೇವೆ ಸಲ್ಲಿಸಿದ್ದಾರೆ. ಅವರ ಹೆಸರಿನಲ್ಲಿ ಆರಂಭವಾಗಿರುವ ಡಾ.ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರ ಶ್ರೇಷ್ಠ ಸಂಶೋಧನಾ ಕೇಂದ್ರವಾಗಿ ರೂಪುಗೊಂಡಿದೆ ಎಂದರು.
ಶಿವಮೊಗ್ಗದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ಇಷ್ಟಲಿಂಗವನ್ನು ಶ್ರದ್ಧೆಯಿಂದ ಧಾರಣೆ ಮಾಡಬೇಕು. ದೇಹವನ್ನೇ ದೇವಾಲಯವಾಗಿ ಪರಿವರ್ತಿಸಿಕೊಳ್ಳುವ ಅದ್ಭುತ ಪರಿಕಲ್ಪನೆಯನ್ನು ನೀಡಿದ್ದು ಅಣ್ಣ ಬಸವಣ್ಣ ಎಂದರು. ದೇವರಿಗೆ ಆಶ್ರಯ ದೇವಾಲಯ ಅಲ್ಲ, ಈ ದೇಹವೇ ದೇವರ ಆಶ್ರಯ ಎಂದರು.

ನಿಡೋಣಿಯ ಡಾ.ಸಿದ್ಧಲಿಂಗ ಸ್ವಾಮೀಜಿ, ಜಡೆ ಮಹಾಂತಮಠದ ಶ್ರೀಗಳು, ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ, ಷಣ್ಮುಖಾರೂಢ ಮಠದ ಅಭಿನವ ಸಿದ್ಧಾರೂಢ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಬಿಎಲ್ಡಿಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಮಾಜಿ ಅಧ್ಯಕ್ಷ ವಿ.ಎಸ್. ಪಾಟೀಲ, ಕಸಾಪ ಜಿಲ್ಲಾಧ್ಯಕ್ಷ ಪಾಟೀಲ, ಶಾಸಕ ವಿಠಲ ಕಟಕದೊಂಡ, ಜಿ.ಪಂ.ಹಾಸಿಂಪೀರ ವಾಲೀಕಾರ, ಕರ್ನಾಟಕ ಸಾಬೂನು- ಮಾರ್ಜಕ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ. ಪ್ರಶಾಂತ, ಚಿಂತನ ಸಾಂಸ್ಕೃತಿಕ ಬಳಗದ ಕಾರ್ಯದರ್ಶಿ
ಡಾ.ಮಹಾಂತೇಶ ಬಿರಾದಾರ, ಡಿವೈಎಸ್ಪಿ ಬಸವರಾಜ ಯಲಿಗಾರ ಉಪಸ್ಥಿತರಿದ್ದರು. (ಕೃಪೆ ವಾರ್ತಾ ಭಾರತಿ)
